Top Newsಜನಸಾಮಾನ್ಯರ ದನಿರಾಜ್ಯ

ಖಾಸಗಿ ಹಿಡಿತದಿಂದ ಮುಕ್ತವಾಗ್ತಿದೆ 108 ಆಂಬ್ಯುಲೆನ್ಸ್ – ಇನ್ನಾದರೂ ಸರಿಹೋಗಲಿ ಆರೋಗ್ಯ ಸೇವೆ

108 ಆಂಬ್ಯುಲೆನ್ಸ್ ನಿರ್ವಹಣೆಯನ್ನ ಖಾಸಗಿ ಏಜೆನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, 108 ಆಂಬ್ಯುಲೆನ್ಸ್ ಸೇವೆಯನ್ನು ಇಲ್ಲಿಯವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಆಂಬ್ಯುಲೆನ್ಸ್ ನಿರ್ವಹಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ.

ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲಾ 108 ಆಂಬ್ಯುಲೆನ್ಸ್ ಗಳನ್ನ ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಇದಾದ ಬಳಿಕ ಮೂರು ತಿಂಗಳ ಒಳಗಾಗಿ 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು.

108 ಆಂಬ್ಯುಲೆನ್ಸ್ ಸೇವೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಬಹು ಮುಖ್ಯವಾದದ್ದು. ಖಾಸಗಿ ಏಜೆನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ.. ಸರ್ಕಾರದಿಂದ ಏಜೆನ್ಸಿಗೆ ಹಣ ಪಾವತಿಯಾದರೂ, ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ. ಸರ್ಕಾರ ಹಲವು ಬಾರಿ ಮದ್ಯಪ್ರವೇಶಿಸಿ ಅಂಬ್ಯುಲೆನ್ಸ್ ಡ್ರೈವರ್ ಗಳ ಸಮಸ್ಯೆಯನ್ನ ಬಗೆಹರಿಸಬೇಕಾಗಿತ್ತು.‌

ಈಗ ಸರ್ಕಾರವೇ ನಿರ್ವಹಣೆ ಮಾಡುವುದರಿಂದ ಇನ್ಮುಂದೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

108 ಆಂಬ್ಯುಲೆನ್ಸ್ ಗಳ ಮಾಲಿಕತ್ವ ಸರ್ಕಾರದ ಬಳಿ ಇದೆ. ಆಂಬ್ಯುಲೆನ್ಸ್ ಗಳಿಗೆ ಡಿಸೇಲ್, ಪೆಟ್ರೋಲ್ ನಿಂದ ಹಿಡಿದು ವಾಹನ ಚಾಲಕರ ವೇತನವನ್ನು ಕೂಡಾ ಸರ್ಕಾರವೇ ನೀಡುತ್ತಿತ್ತು. ಕೇವಲ ಒಂದು ಕಮಾಂಡ್ ಸೆಂಟರ್ ಮೂಲಕ ಖಾಸಗಿ ಏಜೆನ್ಸಿಯವರು ನಿರ್ವಹಣೆ ಮಾಡುತ್ತಿದ್ದರು.

ಇದೀಗ ಏಜೆನ್ಸಿಯ ಬದಲು ಆರೋಗ್ಯ ಇಲಾಖೆಯೇ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ಹಣ ಉಳಿತಾಯವಾಗಲಿದೆ. ಅಲ್ಲದೇ ವ್ಯವಸ್ಥೆಯಲ್ಲೂ ಸುಧಾರಣೆ ತರಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

Comments (0)

Your email address will not be published. Required fields are marked *

Back to top button