ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ತಲಕಾವೇರಿ ಕಾವೇರಿ ಜಾತ್ರೆ ಗುರುವಾರ ನಡೆಯಲಿದೆ. ಗುರುವಾರ ಬೆಳಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಭವ ಆಗಲಿದೆ. ಆ ಸಂದರ್ಭದಲ್ಲಿ ಜೀವನದಿ ಕಾವೇರಿಗೆ ಜಲ ರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ ಎಂಬುದು ಭಕ್ತರ ನಂಬಿಕೆ.
ಕೊಡವ ಜನಾಂಗದವರ ಕುಲದೇವತೆಯಾದ ಕಾವೇರಿ ಪ್ರತಿವರ್ಷ ತುಲಾ ಸಂಕ್ರಮಣದಂದು ಭಾಗಮಂಡಲ ಸಮೀಪದ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಬಹಳ ಹಿಂದಿನ ಕಾಲದಿಂದಲೂ ಇದೆ. ಕಾವೇರಿ ತೀರ್ಥೋದ್ಭವಕ್ಕೆ ಸಾಕಷ್ಟು ಐತಿಹಾಸಿಕ ಮತ್ತು ಪೌರಾಣಿಕ ಹಿನ್ನೆಲೆಗಳೂ ಇವೆ.ಕಾವೇರಿ ತೀರ್ಥೋದ್ಭವದ ಸಂಭ್ರಮದ ಕ್ಷಣ ಕಣ್ತುಂಬಿಕೊಳ್ಳಲು ಪ್ರತಿ ವರ್ಷ ರಾಜ್ಯ, ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಾರೆ.
50 ಸಾವಿರ ಜನ ಆಗಮಿಸುವ ನಿರೀಕ್ಷೆ
ತೀರ್ಥೋದ್ಭವಕ್ಕೆ 50 ಸಾವಿರಕ್ಕೂ ಅಧಿಕ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ದೇವಸ್ಥಾನ ಆವರಣದಲ್ಲಿ ಜನರ ನಿಯಂತ್ರಣಕ್ಕೆ ಹೆಚ್ಚುವರಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಹಾಸನ ಹಾಗೂ ಮೈಸೂರಿನಿಂದ ಹೆಚ್ಚುವರಿ ಪೊಲೀಸ್ ತುಕಡಿ ಕರೆಸಲಾಗಿದ್ದು ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ನಿಯೋಜಿಸಲಾಗುತ್ತದೆ.ಆಯಾಕಟ್ಟಿನ ಸ್ಥಳಗಳಲ್ಲಿ 100 ಕ್ಕೂ ಹೆಚ್ಚು ಸಿಸಿಟವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ತಲಕಾವೇರಿಯ ಪ್ರಧಾನ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ.