
ಬೆಂಗಳೂರು: ರಾಜ್ಯ ರಾಜಕಾರಣದ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ. ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ಬರುವ ಬುಧವಾರ (ಜೂನ್ 3) ಡಿಕೆಶಿ ಕರ್ನಾಟಕದ 25ನೇ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳಿಂದ ತಿಳಿದುಬಂದಿದೆ.
ವಿಧಾನಸೌಧದ ಮುಂದೆ ಮಹಾ ಪರ್ವ!
ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಭವ್ಯವಾದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಅದ್ಧೂರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜರುಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಹೈಕಮಾಂಡ್ ನಾಯಕರು ಸೇರಿದಂತೆ ಲಕ್ಷಾಂತರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ರಾಜಧಾನಿಗೆ ಹರಿದುಬರುವ ನಿರೀಕ್ಷೆಯಿದೆ. ಮಾಜಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಅಧಿಕೃತ ಸಭೆಗೂ ಮುನ್ನವೇ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ. ಸಾಮಾನ್ಯವಾಗಿ ಶಾಸಕಾಂಗ ಸಭೆಯ ನಂತರ ನಾಯಕನನ್ನು ಆಯ್ಕೆ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದು ನಿಯಮ. ಆದರೆ, ಇಂದು ಸಂಜೆಯೇ ರಾಜ್ಯಪಾಲರು ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿರುವುದರಿಂದ, ಸಮಯದ ಅಭಾವದ ಹಿನ್ನೆಲೆ ಡಿಕೆಶಿ ಮುಂಚಿತವಾಗಿಯೇ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಲು ನಿರ್ಧರಿಸಿದ್ದಾರೆ.
ಲೋಕಭವನ ಸುತ್ತಲೂ ಬಿಗಿ ಭದ್ರತೆ -ಖಾಕಿ ಪಹರೆ!
ಡಿಕೆಶಿ ನೂತನ ಸಿಎಂ ಆಗಿ ಆಯ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಭವನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ಆರ್ಪಿ (KSRP) ತುಕಡಿಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹದ್ದಿನ ಕಣ್ಣಿಡಲಾಗಿದೆ. ಒಟ್ಟಿನಲ್ಲಿ ಕರ್ನಾಟಕ ರಾಜಕಾರಣದಲ್ಲಿ ‘ಡಿಕೆಶಿ ಯುಗ’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.
#DKShivakumar #KarnatakaNewCM #DKSAsCM #KarnatakaPolitics #BreakingNews #FreedomTV #DKSPattabhisheka #CongressGovernment #BengaluruNews #SiddaramaiahResigns #VidhanaSoudha #Karnatakatrending #Rajbhavan




