ಮಂಗಳೂರು : ರಾಜ್ಯದ ನಾಲ್ಕು ವಿಭಾಗಗಳಲ್ಲಿ ಡಯಾಲಿಸಿಸ್ ಸಮಸ್ಯೆ ಪರಿಹಾರಕ್ಕೆ ಟೆಂಡರ್ ಕರೆಯಲಾಗಿದ್ದು, ಎರಡು ವಿಭಾಗಗಳಲ್ಲಿ ಟೆಂಡರ್ ಅಂತಿಮ ಹಂತದಲ್ಲಿ ಇದೆ. ಪಿಪಿ ಮಾದರಿಯಲ್ಲಿ ಡಯಾಲಿಸಿಸ್ ನಿರ್ವಹಣೆ ಮಾಡಲಾಗುತ್ತದೆ. ಭ್ರೂಣ ಹತ್ಯೆಯ ಪ್ರಕರಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ಇದೆ. ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದರು.

ಸರಕಾರವೇ ಡಯಾಲಿಸಿಸ್ ಯಂತ್ರಗಳ ನಿರ್ವಹಣೆ ಮಾಡುವ ಬಗ್ಗೆ ಚಿಂತನೆ ಕೂಡ ನಡೆಸಿದೆ. ಸರ್ಕಾರವೇ ಡಯಾಲಿಸಿಸ್ ಯಂತ್ರ ಖರೀದಿಸಿ ನಿರ್ವಹಣೆ ಮಾಡಲು ಚಿಂತನೆ ನಡೆಸಿದೆ. ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಈ ಬಗ್ಗೆ ನಿರ್ಧರಿಸಲಾಗುವುದು. ಡಯಾಲಿಸಸ್ ಸಿಬ್ಬಂದಿ ಬಗ್ಗೆ ನಮಗೆ ಕಾಳಜಿ ಇದೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನಾವು ನೋಡಿಕೊಳ್ಳುವುದಾಗಿ ಅವರು ತಿಳಿಸಿದರು. ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಕ್ರಮದ ಅಗತ್ಯ ಇದೆ. ಈ ಬಗ್ಗೆ ಕಾನೂನಿನಲ್ಲಿ ಬದಲಾವಣೆ ತರುವ ಅಗತ್ಯ ಇದೇಯೇ ಎಂಬುದರ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಭ್ರೂಣ ಹತ್ಯೆ ಪ್ರಕರಣವನ್ನು ಈಗಾಗಲೇ ಸಿಬಿಐಗೆ ವಹಿಸಲಾಗಿದೆ. ಇದರ ಮೂಲ ಬೇರನ್ನು ಸರಕಾರ ಕಿತ್ತು ಹಾಕಲಿದೆ. ಸ್ಕ್ಯಾನಿಂಗ್ ಸೆಂಟರ್ ಸೇರಿ ಹಲವು ಕಡೆ ಪರಿಶೀಲನೆ ಆಗಬೇಕಿದೆ. ಅದರ ಜತೆಗೆ ಕೆಲ ಗುಪ್ತಚರ ಮಾಹಿತಿ ಕಲೆ ಹಾಕಬೇಕಿದೆ. ಭ್ರೂಣ ಹತ್ಯೆ ದಂಧೆಯಲ್ಲಿ ಯಾರಿದ್ದಾರೆ, ಯಾರು ಮಾಡುತ್ತಿದ್ದಾರೆ ಎಂಬುದರ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಇಲಾಖೆ ಜತೆಗೆ ಆರೋಗ್ಯ ಇಲಾಖೆ ಕೂಡ ಕೈಜೋಡಿಸಬೇಕಿದೆ. ಅವರಿಗೆ ಸಹಕಾರ ನೀಡಿ ಸತ್ಯಾಂಶ ತಿಳಿಯುವ ಕೆಲಸವನ್ನು ಮಾಡುವ ಹೊಣೆಗಾರಿಕೆ ಸರಕಾರದ ಮೇಲೆ ಇದೆ ಎಂದರು.
ಸತೀಶ್ ಆತ್ಮಹತ್ಯೆ ಪ್ರಕರಣ ಪೊಲೀಸ್ ತನಿಖೆಯಿಂದ ತಿಳಿಯುತ್ತೆ: ಭ್ರೂಣ ಹತ್ಯೆ ಪ್ರಕರಣದ ಆರೋಪವಿದ್ದ ವೈದ್ಯ ಸತೀಶ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭ್ರೂಣ ಹತ್ಯೆ ಸಂಬಂಧ ನಾನು ಎಲ್ಲಾ ಕಡೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸಾರ್ವಜನಿಕರು ಸೇರಿ ಹಲವರಿಂದ ಮಾಹಿತಿ ಪಡೆಯಲಾಗಿದೆ. ಅದರಂತೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದೆ ಬಳಿಕ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ ಎಂದರು. ಸತೀಶ್ ಆಯುಷ್ ಅಧಿಕಾರಿಯಾಗಿದ್ದು, ಅವರು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಗೊತ್ತಿಲ್ಲ. ಭ್ರೂಣ ಹತ್ಯೆ ಪ್ರಕರಣಕ್ಕೂ ಅದಕ್ಕೂ ಸಂಬಂಧ ಇದ್ಯಾ ಗೊತ್ತಿಲ್ಲ. ಹೀಗಾಗಿ ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಹೋಗಲ್ಲ. ಪೊಲೀಸ್ ಇಲಾಖೆ ಮತ್ತು ಸಿಐಡಿ ಅಧಿಕಾರಿಗಳು ಈ ಬಗ್ಗೆ ಸಮಗ್ರ ತನಿಖೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


