
ಬೆಂಗಳೂರು: ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇದೇ ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ನಿಟ್ಟಿನಲ್ಲೇ ಬುಧವಾರದಿಂದ ಬಿಎಂಟಿಸಿ ಮತ್ತು KSRTC ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಗಳು ರಸ್ತೆಗೆ ಇಳಿಯೋದಿಲ್ಲ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ಸಂಕಷ್ಟವಾಗಲಿದೆ.

ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಜನಜೀವನ ಅಸ್ತವ್ಯಸ್ತಗೊಳ್ಳಲಿದ್ದು ಜನಜೀವನ ದುಸ್ತರವಾಗಲಿದೆ. ಈ ಸುದ್ದಿಯನ್ನು ಮನಗೊಂಡ ರಾಜ್ಯ ಸರ್ಕಾರ ‘ನೋ ವರ್ಕ್ ನೋ ಪೇ’ ನಿಯಮ ಜಾರಿಗೆಗೆ ಮುಂದಾಗಿದ್ದು ಸಾರಿಗೆ ಇಲಾಖೆ ನೌಕರರ ಮುಷ್ಕರ ಮಾಡಿದರೆ ಗೈರು ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುವುದು ಎಂಬ ಎಚ್ಚರಿಕೆ ನೀಡಿದೆ.
ಸಾರಿಗೆ ನೌಕರರ ಒಕ್ಕೂಟಗಳು ಒಟ್ಟಾಗಿಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ.ನೌಕರರು ಶೇ 25 ರಷ್ಟು ವೇತನ ಪರಿಷ್ಕರಣೆಗೆ ಪಟ್ಟು ಹಿಡಿದಿದ್ದು, 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಸದ್ಯಕ್ಕೆ ಶೇ 12.5 ವೇತನ ಪರಿಷ್ಕರಣೆಗೆ ಮಾತ್ರ ಒಪ್ಪಿದೆ. ಅಲ್ಲದೆ, 26 ತಿಂಗಳ ವೇತನ ಹಿಂಬಾಕಿಯ ಮೊದಲ ಕಂತು 450 ಕೋಟಿ ರೂಪಾಯಿಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ನೌಕರರು ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಅಸಮಾಧಾನಗೊಂಡಿದ್ದು ಈ ಬಾರಿ ತಮ್ಮ ಬೇಡಿಕೆಗಳು ಈಡೇರದೆ ಹೋದಲ್ಲಿ ಮುಷ್ಕರದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟನೆ ನೀಡಿದ್ದಾರೆ.
ಸಿಬ್ಬಂದಿಗೆ ರಾಜ್ಯ ಸರ್ಕಾರದ ಖಡಕ್ ವಾರ್ನಿಂಗ್!
ಸಾರಿಗೆ ನೌಕರರು ಮೇ.20ರಂದು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರಿಗೆ ಕಠಿಣವಾದ ಎಚ್ಚರಿಕೆಯನ್ನು ರವಾನೆ ಮಾಡಿದೆ.ಬುಧವಾರ ಮುಷ್ಕರದಲ್ಲಿ ಭಾಗಿಯಾಗದಂತೆ ಸಿಬ್ಬಂದಿಗೆ ತಾಕೀತು ಮಾಡಿದೆ. ಸಿಬ್ಬಂದಿ ಯಾವುದೇ ಮುಷ್ಕರ ಮಾಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನೂ ಸೂಚಿಸುವಂತಿಲ್ಲ ಎಂದು ನೇರವಾಗಿ ಎಚ್ಚರಿಸಿದೆ.ಆದರೆ ಈ ಎಚ್ಚರಿಕೆಗೆ ಸೊಪ್ಪು ಹಾಕದ ಸಿಬ್ಬಂದಿ ಮುಷ್ಕರಕ್ಕೆ ತುದಿಗಾಲ ಮೇಲೆ ನಿಂತಿದ್ದಾರೆ.
ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ವಿವಿಧ ನೌಕರರ ಸಂಘಗಳು ಕರೆ ನೀಡಿವೆ. ಆದರೆ ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ತಿಳಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ KSRTC ಎಂಡಿ ಅಕ್ರಂ ಪಾಷಾ ಆದೇಶ ನೀಡಿದ್ದಾರೆ.ಸಾರಿಗೆ ನೌಕರರ ಈ ಮುಷ್ಕರದಲ್ಲಿ ಕರೆ ನೀಡಿರುವ ಕಾರಣ ಮೇ 20ರಂದು ಬಸ್ ಸಾರಿಗೆ ಸಂಚಾರದಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ಜರುಗಿಸಬೇಕು. ಸಿಬ್ಬಂದಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು. ಕೆಲಸಕ್ಕೆ ಗೈರಾಗುವ ನೌಕರರ ವಿರುದ್ಧ ‘ನೋ ವರ್ಕ್ ನೋ ಪೇ’ ಜಾರಿ ಮಾಡಿ. ಅನಿವಾರ್ಯ ಬಿದ್ದಲ್ಲಿ ನೌಕರರ ವಾರದ ರಜೆಯನ್ನು ರದ್ದುಗೊಳಿಸಿ ಕರ್ತವ್ಯವನ್ನು ನಿಯೋಜಿಸಬೇಕೆಂದು ಅಕ್ರಂ ಪಾಷಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಆಡಳಿತ ವರ್ಗಕ್ಕೆ ಮುಷ್ಕರದ ಕುರಿತು ನೋಟೀಸು ನೀಡಲಾಗಿದ್ದು ಇದು ಪ್ರಸ್ತುತ ರಾಜ್ಯದ ಕಾರ್ಮಿಕ ಆಯುಕ್ತರ ವ್ಯಾಪ್ತಿಗೆ ಬಂದಿದ್ದು ರಾಜೀ ಸಂಧಾನದಲ್ಲಿದೆ. ಕೈಗಾರಿಕಾ ವಿವಾದಗಳ ಕಾಯಿದೆ-1947 ಮತ್ತು ನಿಯಮಗಳನ್ವಯ ‘ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ’ ಯ ನೌಕರರ ಮುಷ್ಕರದ ನೋಟಿಸ್ ವಿವಾದವು ರಾಜಿ ಸಂಧಾನದ ಪ್ರಕ್ರಿಯೆಯಲ್ಲಿರುವಾಗ ನೌಕರರು ಮುಷ್ಕರ ಹೂಡುವಂತಿಲ್ಲ ಎಂಬುದು ರಾಜ್ಯ ಸರ್ಕಾರದ ನಿಲುವಾಗಿದೆ. ಹೀಗಾಗಿ ನಿಗಮದ ನೌಕರರು ಯಾವುದೇ ಕಾರಣಕ್ಕೂ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸಬಾರದು. ಮತ್ತು ತಮ್ಮ ದೈನಂದಿನ ಕರ್ತವ್ಯಕ್ಕೆ ಅವಶ್ಯ ಹಾಜರಾಗಿ, ರಾಜ್ಯದ ಜನರ ಪ್ರೀತಿ ವಿಶ್ವಾಸಕ ಪಾತ್ರರಾಗಬೇಕಾಗಿ ಮನವಿ ಮಾಡಲಾಗಿದೆ.ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ವಿರುದ್ಧ ಶಿಸ್ತಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ.
#FreedomTV #KSRTCStrike #BMTC #TransportStrike #KarnatakaNews #Bengaluru #BusStrike #BusBandh #NoWorkNoPay #GovernmentWarning #PublicTransport #KSRTC #LabourProtest #BreakingNewsKannada #KarnatakaGovernment #TransportEmployees #StrikeNews #ಸಾರಿಗೆಮುಷ್ಕರ #ಕರ್ನಾಟಕ #ಬೆಂಗಳೂರು




