ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.ಮಳೆಯ ಪರಿಣಾಮಕ್ಕೆ ಜಲಾಶಯಗಳಿಗೆ ಜೀವಕಳೆ ಬಂದಂತಾಗಿದೆ.ಬಿಸಿಲಿನ ತಾಪಕ್ಕೆ ಕೆಆರ್ಎಸ್ನ ನೀರಿನ ಪ್ರಮಾಣ 89 ಅಡಿಗೆ ಕುಸಿದಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ ಆಗಿದೆ.
ಬಾಗಲಕೋಟೆ ಭಾಗದಲ್ಲೂ ಮಳೆಯ ಆರ್ಭಟ ಜೋರಾಗಿರೋದ್ರಿಂದ ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳವಾಗಿದೆ. ಹಿಪ್ಪರಗಿ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ. ಸದ್ಯ 42 ಸಾವಿರ ಕ್ಯೂಸೆಕ್ ಹೊರ ಹರಿವು ಇದೆ. ನೀರಿನ ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವಿನ ಪ್ರಮಾಣ ನಿಗದಿ ಮಾಡಲಾಗಿದೆ. ಪ್ರವಾಹಕ್ಕೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ಅಧಿಕಾರಿಗಳು ತೆಗೆದುಕೊಂಡಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮಡಿಕೇರಿಯ ಮುಡಿಯಾ ಲೇಔಟ್ ಸಂಪೂರ್ಣ ಜಲಾವೃತವಾಗಿದೆ.ಆಗುಂಬೆ ಹಾಗೂ ಶಿವಮೊಗ್ಗದಲ್ಲಿ 19 ಸೆಂಟಿ ಮೀಟರ್,ಭಾಗಮಂಡಲ 17 ಸೆಂ.ಮೀ., ಉಡುಪಿ 14 ಸೆಂ.ಮೀ.ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ..