ಮಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಚಂಡಮಾರುತ ಮಾದರಿ ವಾತಾವರಣ ಉಂಟಾಗಿದ್ದು, ಪರಿಣಾಮ ಕರಾವಳಿ ಮತ್ತು ಮಲೆನಾಡಿನಲ್ಲಿ ಐದು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರ ಮತ್ತು ಉತ್ತರ ಕೇರಳ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಜ. 4 ರಂದು ಬೆಳಿಗ್ಗೆ 8.30 ಗಂಟೆಯಿಂದ ಐದು ದಿನಗಳ ವರೆಗೆ ಮಳೆ ಆಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಯ ಕೆಲ ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಜ. 5 ಮತ್ತು 6 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಯಲ್ಲೂ ಮಳೆ ಆಗುವ ಸಾಧ್ಯತೆಯಿದೆ. ಗುರುವಾರ ಬೆಳಗ್ಗಿನಿಂದ ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಬುಧವಾರ ಬೆಳ್ತಂಗಡಿ, ಮೂಡುಬಿದಿರೆ ಭಾಗದಲ್ಲಿ ಮಳೆಯಾಗಿತ್ತು.