Top Newsಜಿಲ್ಲೆಫ್ರೀಡಂ ಟಿವಿ ವಿಶೇಷರಾಜಕೀಯರಾಜ್ಯವಿಶೇಷವೈರಲ್ ನ್ಯೂಸ್ಸುದ್ದಿ

ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ ವಾಪಸ್ ಕೊಟ್ಟಿರುವ ವಿಚಾರವಾಗಿ ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು ಎಂದು ಪ್ರತಿಕ್ರಿಯೆ ನೀಡಿದರು.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ  ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ, ಈಗ ತನಿಖೆ ಆರಂಭವಾಗಿದೆ. ಈಗ ಸೈಟ್ ವಾಪಸ್ ಕೊಟ್ಟಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ವಾಪಸ್ ಕೊಡುವ ಮೂಲಕ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ. ಎಫ್‌ಐಆರ್ ಆದ ಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್‌ಐಆರ್ ಮಾಡಿಕೊಂಡು ತನಿಖೆ ಮಾಡುತ್ತಿದೆ. ಕಾಂಗ್ರೆಸ್ (Congress) ನಾಯಕರು ತಪ್ಪೇ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದು ತಿಳಿಸಿದರು.

ಸೈಟ್ ವಾಪಸ್ ಕೊಡುವ ಮೂಲಕ ತಪ್ಪಾಗಿದೆ ಎನ್ನುವುದು ಒಪ್ಪಿಕೊಂಡಂತಾಗಿದೆ. ಈ ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು ಎಂದು ನೆನಪಿಸಿಕೊಳ್ಳಲಿ. ಆಗ ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು. ಇದೇ ಮಾತು ಈಗ ಸಿದ್ದರಾಮಯ್ಯ ಅವರಿಗೂ ಅನ್ವಯ ಆಗುತ್ತದೆ. ಸೈಟ್ ವಾಪಸ್‌ನೊಂದಿಗೆ ಸೈಟು ಹಂಚಿಕೆ ಕಾನೂನುಬಾಹಿರವಾಗಿ ಹಾಗೂ ಅಕ್ರಮವಾಗಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು

Comments (0)

Your email address will not be published. Required fields are marked *

Back to top button