ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅದ್ಭುತ ರಾಜಕಾರಣಿ, ಕವಿಹೃದಯಿ, ಹಾಸ್ಯಪ್ರಜ್ಞೆ, ಅದ್ಭುತ ಭಾಷಕಕಾರರಾಗಿಯೂ ಖ್ಯಾತರಾಗಿದ್ದರು. ಅತ್ಯಂತ ಜನಪ್ರಿಯ ನಾಯಕರಾಗಿದ್ದ ವಾಜಪೇಯಿಯವರು ಮಧ್ಯ ಪ್ರದೇಶದ ಗ್ವಾಲಿಯರ ಹತ್ತಿರದ ಶಿಂದೆ ಕಿ ಚವ್ವಾಣಿ ಎಂಬ ಗ್ರಾಮದಲ್ಲಿ 1924ರ ಡಿಸೆಂಬರ್ 25ರಂದು ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರ ಮಗನಾಗಿ ಜನಿಸಿದರು.
ಈ ಬಾರಿ ಅಟಲ್ ಬಿಹಾರಿ ವಾಜಪೇಯಿಯವರ 100 ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಈ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿಯೂ ಆಚರಿಸಿಕೊಂಡು ಬರಲಾಗುತ್ತಿದೆ. ಹೌದು, ಮೂರು ಬಾರಿ ಪ್ರಧಾನ ಮಂತ್ರಿಯಾಗಿ, 11 ಬಾರಿ ಲೋಕಸಭೆ ಹಾಗೂ 2 ಬಾರಿ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸುವ ಮೂಲಕ ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳು ಮತ್ತು ಕಾರ್ಯಕ್ರಮಗಳು ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾದರು. ಹೀಗಾಗಿ ದೇಶದ ಅಭಿವೃದ್ಧಿಗೆ ವಾಜಪೇಯಿ ನೀಡಿದ ಕೊಡುಗೆಯನ್ನು ಸ್ಮರಿಸಲು ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನವನ್ನು ಭಾರತದಲ್ಲಿ ವಾರ್ಷಿಕವಾಗಿ ಉತ್ತಮ ಆಡಳಿತ ದಿನವಾಗಿ ಸ್ಮರಿಸಲಾಗುತ್ತದೆ ಎಂದು ಘೋಷಿಸಿತು. ಅಂದಿನಿಂದ ಪ್ರತಿ ವರ್ಷ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಉತ್ತಮ ಆಡಳಿತ ದಿನದ ಮಹತ್ವ
ಉತ್ತಮ ಆಡಳಿತದ ಮೂಲಕ ನಾಗರಿಕರಲ್ಲಿ ಸರ್ಕಾರದ ಹೊಣೆಗಾರಿಕೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ಉತ್ತಮ ಆಡಳಿತ ದಿನವು ಸರ್ಕಾರದ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಬಗ್ಗೆ ನಾಗರೀಕರಿಗೆ ತಿಳಿಸುವುದಕ್ಕೆ ಪ್ರಮುಖ ವೇದಿಕೆಯಾಗಿದೆ. ಈ ದಿನದ ಆಚರಣೆಯೂ ನಾಗರಿಕರು ಮತ್ತು ಸರ್ಕಾರದ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ ಸರ್ಕಾರ ಮತ್ತು ವಿವಿಧ ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.