ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ. ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಗಣತಂತ್ರ ದಿನದ ಶುಭಾಶಯ ಕೋರಿದರು.
ಬೆಳಿಗ್ಗೆ 9 ಗಂಟೆಗೆ ರಾಷ್ಟ್ರಧ್ವಜ ಏರಿಸಿದ ರಾಜ್ಯಪಾಲರು, ನಂತರ ರಾಷ್ಟ್ರಗೀತೆಯ ಗೌರವದೊಂದಿಗೆ ಪರೇಡ್ ವೀಕ್ಷಿಸಿದರು. ತೆರೆದ ಜೀಪಿನಲ್ಲಿ ಸಾಗಿದ ಅವರು ವಿವಿಧ ತುಕಡಿಗಳಿಂದ ವಂದನಾ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ಹಲವು ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 516 ಮಂದಿ ಪರೇಡ್ನಲ್ಲಿ ಭಾಗವಹಿಸಿ ಶಿಸ್ತುಬದ್ಧ ಪ್ರದರ್ಶನ ನೀಡಿದರು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದಾದ್ಯಂತ ಹಾಗೂ ಮೈದಾನದ ಸುತ್ತಮುತ್ತ ಸುಮಾರು 2,000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಇ-ಪಾಸ್ ವ್ಯವಸ್ಥೆ: ಸಾರ್ವಜನಿಕರ ಅನುಕೂಲಕ್ಕಾಗಿ ಮೊದಲ ಬಾರಿಗೆ ಆನ್ಲೈನ್ ಮೂಲಕ 2,000 ಇ-ಪಾಸ್ಗಳನ್ನು ವಿತರಿಸುವ ಮೂಲಕ ವ್ಯವಸ್ಥಿತವಾಗಿ ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಧ್ವಜಾರೋಹಣದ ನಂತರ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಸಂವಿಧಾನದ ಆಶಯಗಳು ಹಾಗೂ ರಾಜ್ಯದ ಅಭಿವೃದ್ಧಿಯ ಪಥದ ಬಗ್ಗೆ ಬೆಳಕು ಚೆಲ್ಲಿದರು. ನಗರದಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಡ್ರೋನ್ ಮೂಲಕ ಪೊಲೀಸರು ತೀವ್ರ ನಿಗಾ ವಹಿಸಿದ್ದರು. ಒಟ್ಟಾರೆ ದೇಶಪ್ರೇಮದ ಕಿಚ್ಚಿನೊಂದಿಗೆ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಜರುಗಿತು.


