ಆನೇಕಲ್ : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿಪಡಿಸುತ್ತಿರುವ ಹಿನ್ನೆಲೆ, ತಮಿಳುನಾಡು ಸರ್ಕಾರದ ವಿರುದ್ಧ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ವಾಟಾಳ್ ನಾಗರಾಜ್ ಹಾಗೂ ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ತಮಿಳುನಾಡು ಸರ್ಕಾರ ಹೆದರಿಸಿ ಬೆದರಿಸಿ ಕರ್ನಾಟಕದ ಮೇಲೆ ಒತ್ತಡ ತರುತ್ತಿದೆ. ಬೆಂಗಳೂರಿನ ಜನರು ನೀರಿನ ಬದಲು ಕಣ್ಣೀರಿನಲ್ಲಿ ಕೈ ತೊಳಿಯುವಂತಾಗಿದೆ. ರಾಜ್ಯದಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ಇದರಿಂದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿಪಡಿಸಬಾರದು. ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದ ಗಡಿ ಅತ್ತಿಬೆಲೆ ಗಡಿ ಗೋಪುರದ ಬಳಿ ಪ್ರತಿಭಟನೆ ನಡೆಸಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.