ಮೊನ್ನೆಯಷ್ಟೇ ಬಿಜೆಪಿಗೆ ಘರ್ ವಾಪ್ಸಿ ಮಾಡಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಅಗ್ನಿ ಪರೀಕ್ಷೆ ಎದುರಾಗಿದೆ . ಬಿಜೆಪಿಗೆ ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನ ಶಾಸಕ ಸ್ಥಾನದಿಂದ ತೆಗೆದು ಅನರ್ಹಗೊಳಿಸಬೇಕು ಎಂದು ಕಾಂಗ್ರೆಸ್ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ಗೆ ದೂರು ನೀಡಲಾಗಿದೆ. ಕೆಪಿಸಿಸಿ ವಕ್ತಾರ ಸಿ ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಸ್ಪೀಕರ್ಗೆ ದೂರು ಸಲ್ಲಿಸಿದ್ದಾರೆ. ಬಿಜೆಪಿಗೆ ಸೇರಿದ ಜನಾರ್ದನ ರೆಡ್ಡಿ ಅವರನ್ನು ಸಂವಿಧಾನದ 10ನೇ ಅನುಸೂಚಿ ಅನ್ವಯ ಅನರ್ಹಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು ದೂರು ನೀಡಿದ್ದು, ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರಾಗಿದೆ.
ಜನಾರ್ದನ ರೆಡ್ಡಿಯವರು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಸಿಗದ ಕಾರಣಕ್ಕೆ ತಮ್ಮದೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿ, ಚುನಾವಣೆಗೆ ಸ್ಪರ್ಧಿಸಿದ್ದರು. ಹಲವು ಕಡೆ ಕೆಆರ್ಪಿಪಿ ಅಭ್ಯರ್ಥಿಗಳು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು ಕೂಡ ಗಂಗಾವತಿಯಿಂದ ಜನಾರ್ದನ ರೆಡ್ಡಿ ಮಾತ್ರ ಆಯ್ಕೆಯಾಗಿ, ಕೆಆರ್ಪಿಪಿಯ ಏಕೈಕ ಶಾಸಕರಾಗಿದ್ದರು. ಈಗ ಲೋಕಸಭಾ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಜನಾರ್ದನ ರೆಡ್ಡಿ ಮರಳಿದ್ದು, ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿದ್ದಾರೆ.
ಆದ್ರೆ ಜನಾರ್ದನ ರೆಡ್ಡಿ ಪಕ್ಷವನ್ನು ವಿಲೀನ ಮಾಡುವುದಾಗಿ ಘೋಷಿಸಿರುವುದು ಪಕ್ಷಾಂತರ ನಿಷೇಧ ಕಾಯಿದೆಯ ಉಲ್ಲಂಘನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಸಿ ರಮೇಶ್ ಬಾಬು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ದೂರು ನೀಡಿದ್ದಾರೆ.ಒಟ್ಟಾರೆ ಗಾಲಿ ಜನಾರ್ಧನ ರೆಡ್ಡಿಗೆ ಬಿಜೆಪಿ ಸೇರಿದ ಮೊದಲ ವಾರದಲ್ಲೇ ಕಂಟಕ ಶುರುವಾಗಿದೆ.