ರಾಜಕೀಯರಾಜ್ಯಸುದ್ದಿ

ಏಪ್ರಿಲ್ 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ : ಅನಂತಕುಮಾರ್ ಹೆಗಡೆ ಮನೆ ಸಮೀಪದಲ್ಲಿ ಸಮಾವೇಶ!

 ಶಿರಸಿ: ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರವಂತೂ ಯಾರ ಕೈಗೂ ಸಿಗದ ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶಕ್ಕೆ ಹಾಜರಾಗುತ್ತಾರಾ ಎಂಬ ಕುತೂಹಲ ಈಗ ಮೂಡಿದೆ. ವಿಶೇಷವೆಂದರೆ, ಸಂಸದ ಅನಂತಕುಮಾರ್ ಹೆಗಡೆ ನಿವಾಸದ ಅನತಿ ದೂರದಲ್ಲಿರುವ ಮೈದಾನದಲ್ಲೇ ಮೋದಿ ಸಮಾವೇಶ ನಡೆಯಲಿದೆ.

ಲೋಕಸಭೆ ಚುನಾವಣೆಗೆ  ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಉಳಿದ 14 ಕ್ಷೇತ್ರಗಳಿಗೆ ಮೇ 7ರಂದು ಮತದಾನ  ನಡೆಯಲಿದೆ. ಹೀಗಾಗಿ ರಾಜ್ಯದ ಎರಡನೇ ಹಂತದ ಮತದಾನಕ್ಕೂ ಮುನ್ನ ಏಪ್ರಿಲ್ 28ರಂದು ಪ್ರಧಾನಿ ನರೇಂದ್ರ ಮೋದಿ  ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರು ಕಡೆ ಬೃಹತ್ ಚುನಾವಣಾ ಪ್ರಚಾರ ಸಮಾವೇಶ ನಡೆಸಲಿದ್ದಾರೆ. ಇದೇ ವೇಳೆ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸದ್ಯ ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದೆ ಮೌನವಹಿಸಿರುವ ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಮನೆ ಸಮೀಪದ ಮೈದಾನದಲ್ಲೇ ಮೋದಿ ಸಮಾವೇಶ ನಡೆಯಲಿರುವುದು ಕುತೂಹಲ ಮೂಡಿಸಿದೆ.

ಪ್ರಧಾನಿ ಮೋದಿ ಶಿರಸಿಗೆ ಬರುವುದು ಖಚಿತವಾಗುತ್ತಿದ್ದಂತೆಯೇ ಅನಂತಕುಮಾರ್ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ. ಈ ಹಿಂದೆ ಅಂಕೊಲಾಗೆ ಮೋದಿ ಬಂದಿದ್ದಾಗ ಅನಾರೋಗ್ಯದ ಕಾರಣ ಹೇಳಿ ಅನಂತಕುಮಾರ್ ಹೆಗಡೆ ಸ್ವಾಗತಕ್ಕೆ ಬಂದಿರಲಿಲ್ಲ. ಇದೀಗ ಅನಂತಕುಮಾರ್ ಹೆಗಡೆ ಮನೆಯಿಂದ ಕೆಲವೇ ಮೀಟರ್​ಗಳ ದೂರದಲ್ಲಿರುವ ಮೈದಾನದಲ್ಲಿ ಮೋದಿ ಸಮಾವೇಶ ನಡೆಯಲಿದೆ. ಇದಕ್ಕೆ ಹೆಗಡೆ ಬರುತ್ತಾರಾ ಎಂಬ ಕುತೂಹಲ ಮೂಡಿದೆ.

ಟಿಕೆಟ್ ಕೈತಪ್ಪಿದ ಕಾರಣ ಅನಂತಕುಮಾರ್ ಹೆಗಡೆ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರ ಮಾಡುತ್ತಿಲ್ಲ. ಅಷ್ಟೇ ಅಲ್ಲದೆ, ಯಾರ ಕೈಗೂ ಸಿಗುತ್ತಿಲ್ಲ. ಮುನಿಸು ತಣ್ಣಗಾಗಿಸಲು ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದರೂ ಅನಂತಕುಮಾರ್ ಹೆಗಡೆ ಕರೆ ಸ್ವೀಕರಿಸಿರಲಿಲ್ಲ.

ಹಾಲಿ ಸಂಸದರಾಗಿರುವ ಅನಂತಕುಮಾರ್ ಹೆಗಡೆ ಮೋದಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಈ ಹಿಂದೆ, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಅನಂತಕುಮಾರ್ ಬರುತ್ತಾರೆ ಎಂದೂ ಬಿಜೆಪಿ ನಾಯಕರು ಹೇಳಿದ್ದರು. ಆದರೆ, ಆ ರೀತಿ ಆಗಿಲ್ಲ ಎಂಬುದು ಗಮನಾರ್ಹ.

Comments (0)

Your email address will not be published. Required fields are marked *

Back to top button