Freedom TV

1,000 ಕೋಟಿ ರೂ. ಅನುದಾನ ತಕ್ಷಣ ಬಿಡುಗಡೆ ಮಾಡಿ -ಆರ್‌.ಅಶೋಕ ಆಗ್ರಹ

ಬೆಂಗಳೂರು;  ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿಗಳನ್ನು ನಡೆಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಕಡೆಗಣಿಸಿದೆ. ರಸ್ತೆಗಳಲ್ಲಿ ಗುಂಡಿ, ಕಸದ ರಾಶಿ ಎಲ್ಲೆಡೆ ಕಾಣುತ್ತಿದೆ. ಪೌರಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ. ರಾಜಧಾನಿಯಲ್ಲಿ ಒಂದೇ ಒಂದು ರೂಪಾಯಿ ಕಾಮಗಾರಿ ನಡೆದಿಲ್ಲ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಗರ ವೀಕ್ಷಣೆ ಮಾಡಿದ್ದಾರೆಯೇ ಹೊರತು, ಅಭಿವೃದ್ಧಿಗೆ ಹಣ ನೀಡಿಲ್ಲ ಎಂದು ದೂರಿದರು.

ಬೆಂಗಳೂರಿನ ಜನರು ಈಗ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳುತ್ತಿದ್ದಾರೆ. ಬೆಂಗಳೂರು ಜನರು ಅತ್ಯಧಿಕ ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದ ಒಟ್ಟು ತೆರಿಗೆಯಲ್ಲಿ ಅತಿ ಹೆಚ್ಚು ಪಾಲು ಬೆಂಗಳೂರಿಂದ ಬರುತ್ತದೆ. ಬ್ರ್ಯಾಂಡ್‌ ಬೆಂಗಳೂರು ಎಂದು ಹೇಳಿ ಕಾಂಗ್ರೆಸ್‌ ಸರ್ಕಾರ ಬ್ಯಾಡ್‌ ಬೆಂಗಳೂರು, ಕ್ರೈ ಬೆಂಗಳೂರು ಹಾಗೂ ಕಸದ ರಾಶಿಯ ಬೆಂಗಳೂರನ್ನು ನೀಡಿದೆ. ಮಳೆಗಾಲ ಆರಂಭವಾಗುವ ಮುನ್ನವೇ ಸರ್ಕಾರ ಎಚ್ಚೆತ್ತು 1 ಸಾವಿರ ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿ ಏನೂ ಅನಾಹುತವಾಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ಹೋರಾಟ ಮಾಡಲಾಗಿದೆ ಎಂದು ತಿಳಿಸಿದರು.

ಅಧಿಕಾರಿ ಸಾವಿಗೆ ಸರ್ಕಾರ ಕಾರಣ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇಲ್ಲಿ 187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ. ಇದಕ್ಕೆ ನೇರವಾಗಿ ಸರ್ಕಾರವೇ ಕಾರಣ. 187 ಕೋಟಿ ಲೂಟಿ ಹೊಡೆದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಹಿಂದೆ ಕೆ.ಎಸ್‌.ಈಶ್ವರಪ್ಪನವರ ರಾಜೀನಾಮೆ ಕೇಳಿದ ಕಾಂಗ್ರೆಸ್‌ ಸಚಿವರು ಹಾಗೂ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

Comments (0)

Your email address will not be published. Required fields are marked *

Back to top button