Top Newsಸಿನಿಮಾಸುದ್ದಿ

ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್‌ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

ಅಕ್ಟೋಬರ್ ಮೂರು, ನಾಲ್ಕು, ಐದರಂದು ನಡೆದ ವಿಚಾರಣೆಯಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಸಿವಿ ನಾಗೇಶ್, ಪವಿತ್ರಾ ಪರ ವಕೀಲರು ತನಿಖೆಯಲ್ಲಿ ಹಲವು ಲೋಪದೋಷಗಳಿವೆ ಎಂದಿದ್ದರು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು, ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿಮಾಡಿದ್ದಾರೆ, ಕತೆ ಹೆಣೆದಿದ್ದಾರೆ ಎಂದು ಟೀಕೆ ಮಾಡಿದ್ದರು. ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಅರೇಬಿಯನ್ ನೈಟ್ಸ್ ಕತೆಗೆ ಹೋಲಿಕೆ ಮಾಡಿದ್ದರು.

ಇಂದು ವಾದ ಮಂಡಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್, ಆರೋಪಿಗಳ ಪರ ವಕೀಲರು ಎತ್ತಿರುವ ಪ್ರತಿ ಪ್ರಶ್ನೆಗೂ ಸಹ ಉತ್ತರ ಇದೆ ಎಂದು ಹೇಳಿಯೇ ವಾದ ಆರಂಭಿಸಿದರು. ಸಿವಿ ನಾಗೇಶ್ ಅವರು ಪ್ರಶ್ನೆ ಮಾಡಿದ್ದ, ಎತ್ತಿ ತೋರಿಸಿದ್ದ ಲೋಪದೋಷಗಳಿಗೆ ಬಹುತೇಕ ಉತ್ತರಗಳನ್ನು ಸ್ಪಷ್ಟತೆಯನ್ನು ಎಸ್​ಪಿಪಿ ನೀಡಿದರು. ಮಾತ್ರವಲ್ಲದೆ, ದರ್ಶನ್ ಹಾಗೂ ಅವರ ತಂಡ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿ, ಆ ನಂತರ ನಡೆದ ಘಟನೆಗಳು, ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆ ಎಲ್ಲವನ್ನೂ ಉಲ್ಲೇಖಿಸಿ, ‘ಇದು ದರ್ಶನ್ ರಕ್ತಚರಿತ್ರೆ’ ಎಂದು ಟೀಕೆ ಮಾಡಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಹಾಗೂ ಇತರ ಆರೋಪಿಗಳ ಬಂಧನವಾಗಿ ನಾಲ್ಕು ತಿಂಗಳಾಗಿದೆ. ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ನಾಲ್ಕು ಮಂದಿಗೆ ಈಗಾಗಲೇ ಜಾಮೀನು ದೊರೆತಿದೆ. ದರ್ಶನ್​ರ ಜಾಮೀನಿಗಾಗಿ ರಾಜ್ಯದ ಹೆಸರಾಂತ ವಕೀಲ ಸಿವಿ ನಾಗೇಶ್ ವಾದ ಮಂಡಿಸುತ್ತಿದ್ದಾರೆ. ನಾಳೆಗೆ ವಿಚಾರಣೆ ಮುಂದೂಡಲಾಗಿದೆಯಾದರೂ ನಾಳೆಯೂ ಸಹ ಜಾಮೀನು ಸಿಗುವುದು ಅನುಮಾನವೇ ಎನ್ನಲಾಗುತ್ತಿದೆ. ನಾಳೆಯೂ ಸಹ ಎಸ್​ಪಿಪಿ ಅವರ ವಾದ ಮುಂದುವರೆಯುವ ಸಾಧ್ಯತೆ ಇದೆ.

Comments (0)

Your email address will not be published. Required fields are marked *

Back to top button