Top Newsಸುದ್ದಿ

ಮೈಸೂರು ದಸರಾ ಆಯುಧ ಪೂಜೆ – ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಪೂಜೆ

ಮೈಸೂರು: ನವರಾತ್ರಿಯ 9ನೇ ದಿನವಾದ ಇಂದು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಲಿದೆ. ರಾಜವಂಶಸ್ಥ ಯದುವೀರ್ ಪಟ್ಟದ ಆನೆ, ಕುದುರೆ, ಹಸು ಸೇರಿ ಖಾಸಾ ಆಯುಧಗಳು, ಅರಮನೆ ವಾಹನಗಳಿಗೆ ಪೂಜೆ ಸಲ್ಲಿಸಲಿದ್ದು, ದಸರಾ ವೈಭವ ಮತ್ತಷ್ಟು ಕಳೆಗಟ್ಟಲಿದೆ.

ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನವರಾತ್ರಿಯ 9 ದಿನವಾದ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಯುಧ ಪೂಜಾ ನೆರವೇರಿಸಲಿದ್ದಾರೆ. ಈ ಹಿನ್ನೆಲೆ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ.

ಬೆಳಿಗ್ಗೆ 6ಗಂಟೆಗೆ ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾಹೋಮ ನೆರವೇರಲಿದ್ದು, ಪಟ್ಟದ ಆನೆ, ಕುದುರೆ, ಹಸು ಆನೆ ಬಾಗಿಲಿಗೆ ಆಗಮನವಾಗಲಿವೆ. ಖಾಸಗಿ ಆಯುಧಗಳನ್ನ ಆನೆ ಬಾಗಿಲು ಮೂಲಕ ಶ್ರೀ ಕೋಡಿ ಸೋಮೇಶ್ವರ ದೇವಾಲಯಕ್ಕೆ ರವಾನೆ ಮಾಡಲಾಗುತ್ತದೆ. ಬಳಿಕ ಕೋಡಿ ಸೋಮೇಶ್ವರ ದೇವಾಲಯದಿಂದ ಖಾಸಾ ಆಯುಧಗಳನ್ನ ಆನೆ ಬಾಗಿಲ ಮುಖಾಂತರ ಅರಮನೆಯ ಕಲ್ಯಾಣ ಮಂಟಪಕ್ಕೆ ರವಾನೆ ಮಾಡಲಾಗುತ್ತದೆ. ನಂತರ ಚಂಡಿ ಹೋಮ ಪೂರ್ಣಾಹುತಿ ನೆರವೇರಲಿದೆ. ಆ ನಂತರ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆನೆ ಬಾಗಿಲಿಗೆ ಬಂದು, ಅರಮನೆಯ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಲಿದೆ.

ಆಯುಧ ಪೂಜೆಯ ಕೊನೆಯಲ್ಲಿ ತಾವು ಬಳಸುವ ವಾಹನಗಳಿಗೂ ಯದುವೀರ್ ಪೂಜೆ ಸಲ್ಲಿಸಲಿದ್ದಾರೆ. ನಂತರ ಅರಮನೆಯ ಕಲ್ಯಾಣ ಮಂಟಪದಲ್ಲಿ ಸಂಜೆ ರತ್ನ ಖಚಿತ ಸಿಂಹಾಸನದಲ್ಲಿ ನವರಾತ್ರಿಯ ಕೊನೆಯ ದಿನದ ಖಾಸಗಿ ದರ್ಬಾರ್ ನಡೆಸಿ, ಸಿಂಹಾಸನದಿಂದ ಸಿಂಹ ವಿಸರ್ಜನೆ ಮಾಡುತ್ತಾರೆ. ಆ ಬಳಿಕ ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ಮಾಡುತ್ತಾರೆ.

ಒಟ್ಟಾರೆ ಅಂಬಾವಿಲಾಸ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧಪೂಜೆ ನೆರವೇರಿಸುವ ಮೂಲಕ ನವರಾತ್ರಿ ಪೂಜೆ ಪೂರ್ಣಗೊಳ್ಳಲಿದೆ. ನಾಳೆ ವಿಜಯದಶಮಿ ಮೆರವಣಿಗೆಗೆ ಅರಮನೆ ಆವರಣದಲ್ಲಿ ಭರದ ಸಿದ್ಧತೆ ನಡೆದಿದೆ.

Comments (0)

Your email address will not be published. Required fields are marked *

Back to top button