
ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ದೊರೆತಿದೆ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದ್ದು, ಕೋಟ್ಯಾಂತರ ಭಕ್ತರು ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಾದ ನಾಡದೇವಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡರು.
750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಅರಮನೆ ಆವರಣದಲ್ಲಿ ಅಭಿಮನ್ಯು ಗಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ಸರ್ವಾಲಂಕಾರ ಭೂಷಿತಳಾಗಿ ನಾಡ ಅಧಿದೇವತೆ ಚಾಮುಂಡೇಶ್ವರಿ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದನ್ನು ಕಂಡು ಜನರು ಹರ್ಷೋದ್ಘಾರ ವ್ಯಕ್ತಪಡಿಸಿದರು. ‘ಜೈ ಚಾಮುಂಡೇಶ್ವರಿ..’ ಎಂದು ಕೂಗಿ ಭಕ್ತಿ-ಭಾವ ಮೆರೆದರು.

ಸತತ 5ನೇ ಬಾರಿಗೆ ಚಿನ್ನದಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಪುಷ್ಪಾರ್ಚನೆ ಸ್ಥಳಕ್ಕೆ ಸುಮಾರು 400 ಮೀ. ಸಾಗಿದ. ಅಭಿಮನ್ಯು ಎಡಬಲದಲ್ಲಿ ಕುಮ್ಕಿ ಆನೆಗಳಾಗಿ ಹಿರಣ್ಯ ಮತ್ತು ಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದವು. 4:45 ಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು. ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಮೈಸೂರು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸಾಥ್ ನೀಡಿದರು. ಪುಷ್ಪಾರ್ಚನೆ ಬಳಿಕ ರಾಷ್ಟ್ರಗೀತೆಗೆ ಎಲ್ಲರೂ ಗೌರವ ಸಲ್ಲಿಸಿದರು.




