Top Newsಸುದ್ದಿ

ಮುಡಾ ಹಗರಣ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

ಬೆಂಗಳೂರು: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್​ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದರು. ರಾಜೀನಾಮೆ ಕೊಡುವ ಬಗ್ಗೆ ಸಿಎಂಗೆ ಮೊದಲು ಮಾಹಿತಿ ನೀಡಿದ್ದರು.

ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ರು ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ ಆಗಿದೆಯಾ ಇಲ್ಲ ಅಂತಾ ನಾನು ಹೇಳೊಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯ ಹೊರಬರುತ್ತೆ ಎಂದು ತಿಳಿಸಿದರು.

ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ ಅಷ್ಟೆ. ಸೈಟ್ ವಿಚಾರವಾಗಿ ಸಿಎಂ ಅವರು ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ. ಸಿದ್ದರಾಮಯ್ಯ ನಮ್ಮ ನಾಯಕರು. 40 ವರ್ಷಗಳಿಂದ ಜೊತೆಯಲ್ಲಿ ಇದ್ದೇನೆ. ತಾಲೂಕು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ನನ್ನನ್ನು ಮಾಡಿದ್ದರು. ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತಾ ಹೇಳಿಲ್ಲ. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತ ಹೇಳಿಲ್ಲ. ಎರಡು ಬಾರಿ ಸ್ಟ್ರೋಕ್ ಆಯ್ತು, ಆರೋಗ್ಯ ಸರಿಯಿಲ್ಲ, ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಆಗುವುದಿಲ್ಲ ಅಂತ ರಾಜೀನಾಮೆ ಕೊಟ್ಟಿದ್ದೇನೆ. ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಮಾಡಿದರು ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ.

Comments (0)

Your email address will not be published. Required fields are marked *

Back to top button