#Exclusive NewsTop News

ಪಾಕಿಸ್ತಾನ್‌ ಜಿಂದಾಬಾದ್‌ ಅಂದರೂ ಕ್ರಮವಿಲ್ಲ, ನಮಗೆ ನೋಟಿಸ್‌: ಚಂದ್ರಶೇಖರನಾಥ ಸ್ವಾಮೀಜಿ

ತಮಗೆ ಹುಷಾರಿಲ್ಲ, ನಡೆಯಲೂ ಆಗುವುದಿಲ್ಲ ಎಂದು ಕ್ಷಮೆ ಕೇಳಿದರೂ ಈ ವಯಸ್ಸಿನಲ್ಲಿ ಕೇಸ್ ಹಾಕುತ್ತಾರೆ. ಪೊಲೀಸರು ನೋಟಿಸ್ ನೀಡಿದ್ದು ತಮಗೆ ಹೋಗಲು ಸಾಧ್ಯವಿಲ್ಲ. ಅವಶ್ಯವಿದ್ದರೆ ಮಠಕ್ಕೆ ಬಂದು ಹೇಳಿಕೆ ಪಡೆಯಲಿ ಎಂದು ಸ್ಪಷ್ಟಪಡಿಸಿದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ


ಬೆಂಗಳೂರು(ಡಿ.03): ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದರೂ ಅವರನ್ನು ಏನೂ ಮಾಡಿಲ್ಲ. ಆದರೆ ತಮ್ಮ ವಿರುದ್ದ ಮಾತ್ರ ಪ್ರಕರಣ ದಾಖಲು ಮಾಡುತ್ತಾರೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು’ ಎಂದು ಹೇಳಿದ್ದಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ವಿಷಯ, ಪಾಕಿಸ್ತಾನ್ ಜಿಂದಾಬಾದ್ ಸೇರಿ ಎಂತೆಂಥ ವಿಷಯಗಳಾಗಿಲ್ಲ, ಆ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ತಮಗೆ ಹುಷಾರಿಲ್ಲ, ನಡೆಯಲೂ ಆಗುವುದಿಲ್ಲ ಎಂದು ಕ್ಷಮೆ ಕೇಳಿದರೂ ಈ ವಯಸ್ಸಿನಲ್ಲಿ ಕೇಸ್ ಹಾಕುತ್ತಾರೆ. ಪೊಲೀಸರು ನೋಟಿಸ್ ನೀಡಿದ್ದು ತಮಗೆ ಹೋಗಲು ಸಾಧ್ಯವಿಲ್ಲ. ಅವಶ್ಯವಿದ್ದರೆ ಮಠಕ್ಕೆ ಬಂದು ಹೇಳಿಕೆ ಪಡೆಯಲಿ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು.

ವಿಚಾರಣೆಗೆ ಗೈರು: ತನಿಖಾಧಿಕಾರಿಗೆ ಪತ್ರ

ಮುಸ್ಲಿಂ ಸಮುದಾಯದ ಬಗ್ಗೆ ವಿವಾದಾ ತ್ಮಕ ಹೇಳಿಕೆ ನೀಡಿದ ಆರೋಪ ಸಂಬಂಧ ಸಮಾರ ಚಂದ್ರಶೇಖರನಾಥ ಸ್ವಾಮೀಜಿ ಸೋಮವಾರ ಪೊಲೀಸರ ವಿಚಾರಣೆಗೆ ಗೈರಾಗಿದ್ದಾರೆ. ತನಿಖೆ ನಡೆಸುತ್ತಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ಸೋಮವಾರ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ನೋಟಿಸ್ ನೀಡಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ವಿಚಾರಣೆಗೆ ಗೈರಾಗಿರುವ ಸ್ವಾಮೀಜಿ ಅವರು ಇನ್‌ಸ್ಪೆಕ್ಟರ್‌ಗೆ ಪತ್ರ ಬರೆದು ಡಿ.18ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಚಂದ್ರಶೇಖರ ಸ್ವಾಮೀಜಿ ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ ಎಚ್ಚರಿಕೆ

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದರು.

ಬೆಂಗಳೂರಿನಲ್ಲಿ ಒಕ್ಕಲಿಗರ ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿಯವರನ್ನ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿ ಕುಮಾರ ಚಂದ್ರಶೇಖರನಾಥ ಅವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗೆ ಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದ್ದರು.

ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರ ಪ್ರದೇಶದಲ್ಲಿ ಮೌಲ್ವಿ ಒಬ್ಬ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು ಹೇಳುತ್ತಾರೆ. ನಮ್ಮ ದೇಶದ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಮತ್ತು ಅವರ ಕುಟುಂಬವನ್ನೇ ಖರೀದಿ ಮಾಡುತ್ತೇನೆಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದರು. ಆದರೆ, ಸರ್ಕಾರ ಅದರ ವಿರುದ್ಧ ಕ್ರಮ ವಹಿಸಿಲ್ಲ. ಒಕ್ಕಲಿಗರ ವಿರುದ್ಧ ಕಾಂಗ್ರೆಸ್ ದ್ವೇಷ ಸಾಧಿಸುವುದು ಹೇಯ. ಸರ್ಕಾರ ಸ್ವಾಮೀಜಿಯವರನ್ನು ಮುಟ್ಟುವ ಕೆಲಸ ಮಾಡಿದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಎಚ್ಚರಿಕೆ ನೀಡಿದ್ದರು.

Comments (0)

Your email address will not be published. Required fields are marked *

Back to top button