ಹೊಂದಾಣಿಕೆ ರಾಜಕಾರಣದ ಆರೋಪ: ವಿಜಯೇಂದ್ರ ಹೇಳಿದ್ದಿಷ್ಟು

ಯಾವಾಗ ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ಘೋಷಿಸಿದರೋ ಅಂದಿನಿಂದ ರಾಜ್ಯದಲ್ಲಿ ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇನೆ. ಕೆಲ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹೊಂದಾಣಿಕೆ ರಾಜಕಾರಣದ ಅಭಿಪ್ರಾಯವಿದೆ. ಇದಕ್ಕೆ ಶೀಘ್ರ ಇತಿಶ್ರೀ ಹಾಡಲಾಗುವುದು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು(ಡಿ.04): ನನ್ನ ಕುರಿತು ಪಕ್ಷದ ಪಕ್ಷದ ಕೆಲ ನಾಯಕರಲ್ಲಿರುವ ಹೊಂದಾಣಿಕೆ ರಾಜಕಾರಣದ ಅಭಿಪ್ರಾಯಕ್ಕೆ ಶೀಘ್ರದಲ್ಲೇ ಇತಿಶ್ರೀ ಹಾಡಲಾಗುವುದು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಷಯವನ್ನು ವರಿಷ್ಠರು ಗಮನಿಸುತ್ತಿದ್ದಾರೆ. ಶಿಸ್ತು ಕ್ರಮ ಕೈಗೊಳ್ಳಬೇಕೇ ಅಥವಾ ಸುಮ್ಮನೆ ಬಿಡಬೇಕೇ ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾವಾಗ ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ಘೋಷಿಸಿದರೋ ಅಂದಿನಿಂದ ರಾಜ್ಯದಲ್ಲಿ ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ತರುವ ಗುರಿ ಹೊಂದಿದ್ದೇನೆ. ಕೆಲ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹೊಂದಾಣಿಕೆ ರಾಜಕಾರಣದ ಅಭಿಪ್ರಾಯವಿದೆ. ಇದಕ್ಕೆ ಶೀಘ್ರ ಇತಿಶ್ರೀ ಹಾಡಲಾಗುವುದು. ಆ ನಿಟ್ಟಿನಲ್ಲಿ ನಾನು ಪಕಕ್ಕೆ ಶಕ್ತಿ ತುಂಬಲು ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಈಗಾಗಲೇ ಪಕ್ಷದ ವರಿಷ್ಠರು ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಶಿಸ್ತು ಕ್ರಮದ ಬಗ್ಗೆ ತೀರ್ಮಾನಿಸುತ್ತಾರೆ ಎಂದರು.
ಬಿ.ಪಿ.ಹರೀಶ್ಗೆ ಟಾಂಗ್:
ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ಶಾಸಕ ಬಿ.ಪಿ.ಹರೀಶ್ ಅವರ ಹೆಸರಿನ ಮೊದಲು ಬಿ.ಪಿ. ಇದೆ. ಹೀಗಾಗಿ ಅವರು ಕೆಲ ಬಾರಿ ಸಹನೆ ಕಳೆದುಕೊಂಡು ಮಾತನಾಡು ತ್ತಾರೆ. ಅವರು ನಮ್ಮ ಶಾಸಕರು. ಎರಡು ಬಾರಿ ಗೆದ್ದು ಶಾಸಕರಾಗಿದ್ದಾರೆ ಎಂದು ಟಾಂಗ್ ನೀಡಿದರು.
ಸಂಘಟನಾ ಪರ್ವದ ಪ್ರಯುಕ್ತ ಆಗಮನ:
ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ಜೀ, ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಕೇಂದ್ರದ ಮಾಜಿ ಸಚಿವ ರಾಧಾಕೃಷ್ಣನ್ ನಗರಕ್ಕೆ ಬಂದಿದ್ದಾರೆ. ಸುಮಾರು ನಾಲ್ಕು ತಾಸು ಸಕ್ರಿಯ ಸದಸ್ಯತ್ವ ಮುಂದುವರಿಕೆ, ಬೂತ್ ಸಮಿತಿ ರಚನೆ. ಮಂಡಲ ಸಮಿತಿ ರಚನೆ ಸೇರಿ ಸಂಘಟನೆ ಸಂಬಂಧ ಹಲವು ವಿಚಾರಗಳನ್ನು ಸಮಗ್ರವಾಗಿ ಚರ್ಚಿಸಿ ಕೆಲವು ಸಲಹೆ-ಸೂಚನೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಸಂಘಟನಾ ಪರ್ವ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾವು ಕೋರ್ ಕಮಿಟಿ ಸಭೆ ಮಾಡಿದ್ದೇವೆ. ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೆಲ ಸಲಹೆಗಳು ಬಂದಿವೆ. ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಈ ಎಲ್ಲಾ ಸಲಹೆ-ಸೂಚನೆಗಳನ್ನು ಗಮನದಲ್ಲಿರಿಸಿಕೊಂಡು ಸಂಘನೆ ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.




