Top Newsರಾಜಕೀಯರಾಜ್ಯಸುದ್ದಿ

ಮುಡಾ ಹಗರಣ: ಸಿದ್ದರಾಮಯ್ಯಗೆ ಶುರುವಾಯ್ತು ಮತ್ತೊಂದು ಸಂಕಷ್ಟ!

ಬೆಂಗಳೂರು:  ಸಿದ್ದರಾಮಯ್ಯ  ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ  ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯ (ED) ಪತ್ತೆ ಮಾಡಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಮುಡಾದಿಂದ ಬೇನಾಮಿ ಹಾಗೂ ಇನ್ನಿತರೆ ವ್ಯವಹಾರಗಳ ಮೂಲಕ ಒಟ್ಟು 1095 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದ್ದು, ಇವುಗಳ ಮೌಲ್ಯ ಬರೊಬ್ಬರಿ 700 ಕೋಟಿ ರೂ. ಆಗಿದೆ. ಪಾರ್ವತಿ ಅವರಿಗೆ ಮಾಡಲಾದ ಭೂಪರಿವರ್ತನೆಯಲ್ಲಿ ಶಾಸನಬದ್ಧ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಸಾಕ್ಷ್ಯ ತಿರುಚುವಿಕೆಯ ಸಾಕ್ಷ ಲಭಿಸಿದೆ. ಕಚೇರಿ ಕಾರ್ಯ ವಿಧಾನಗಳ ಉಲ್ಲಂಘನೆ, ಅನವಶ್ಯಕ ಒಲವು ತೋರಿರುವುದು, ಪ್ರಭಾವದ ಬಳಕೆ, ಪೋರ್ಜರಿ ಮಾಡಿರುವುದಕ್ಕೆ ಸಾಕ್ಷ್ಯಗಳು ಇಡಿ ತನಿಖೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್​ಜಿ ದಿನೇಶ್​ ಕುಮಾರ್ ಅಲಿಯಾಸ್​ ಕುಮಾರ್​ ಅನಾವಶ್ಯಕ ಪ್ರಭಾವವನ್ನು ಬೀರಿದ್ದಾರೆ. ಭೂಮಿ ಕಳೆದುಕೊಳ್ಳುವವರ ಸೋಗಿನಲ್ಲಿ ಬೇನಾಮಿ ಅಥವಾ ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನ ಹಂಚಲಾಗಿದೆ. ಈ ಅಕ್ರಮ ಹಂಚಿಕೆಯ ಫಲಾನುಭವಿಗಳು ರಿಯಲ್​ ಎಸ್ಟೇಟ್​ ಉದ್ಯಮಿಗಳು ಮತ್ತು ಪ್ರಭಾವಿ ವ್ಯಕ್ತಿಗಳಾಗಿದ್ದಾರೆ ಎಂದು ಇಡಿ ತನಿಖೆಯಲ್ಲಿ ತಿಳಿದುಬಂದಿದೆ.

ಪಾರ್ವತಿಯವರಿಗೆ ನಿವೇಶನ ಸಿಕ್ಕಾಗ ಅವರ ಪುತ್ರ ಯತೀಂದ್ರ ಮುಡಾ ಮಂಡಳಿಯಲ್ಲಿದ್ದರು. ಪತಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದರು. ಮುಡಾದಿಂದ ಕೆಲವೊಂದು ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಜಾಗವನ್ನೇ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಖರೀದಿಸಿದ್ದಾರೆ ಎಂದು ಇಡಿ ತನಿಖೆಯಲ್ಲಿ ಪತ್ತೆಹಚ್ಚಿದೆ.

Comments (0)

Your email address will not be published. Required fields are marked *

Back to top button