Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಚಿತ್ರದುರ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು: ಕಸಿ ಕಂದಮ್ಮನನ್ನು ಅಗಲಿದ ತಾಯಿ

ಚಿತ್ರದುರ್ಗ: ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದೆ. ಇದೇ ಸಂದರ್ಭದಲ್ಲಿ ಚಿತ್ರದುರ್ಗದಲ್ಲೂ ಸಹ ಬಾಣಂತಿಯ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷದಿಂದಾಗಿ ಬಾಣಂತಿಯು 40 ದಿನದ ಕಂದಮ್ಮನನ್ನು ಅಗಲಿದ್ದು, ಸಂಬಂಧಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಗನೂರುಹಟ್ಟಿ ಗ್ರಾಮದ ಗರ್ಭಿಣಿ ರೋಜಮ್ಮ ಅಕ್ಟೋಬರ್ 31ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ವೈದ್ಯೆ ಡಾ.ರೂಪಶ್ರೀ ಸೀಜರಿನ್ ಆಪರೇಷನ್ ಮಾಡಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದರು. ಐದು ದಿನಗಳ ಬಳಿಕ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಆಗಾಗ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ನಿನ್ನೆ ಬೆಳಗ್ಗೆಯಿಂದ ವಾಂತಿ ಶುರುವಾಗಿದೆ. ಹೀಗಾಗಿ, ನಾಯಕನಹಟ್ಟಿ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ರೋಜಮ್ಮ ಸಾವನ್ನಪ್ಪಿದ್ದಾರೆ.

ಸೀಜರಿನ್ ಆಪರೇಷನ್ ಸಮರ್ಪಕವಾಗಿ ಆಗದ ಕಾರಣ ಇನ್ಫೆಕ್ಷನ್ ಆಗಿದೆ. ಹೊಲಿಗೆ ಹಾಕಿದ ಜಾಗದಲ್ಲಿ ಕೀವು ತುಂಬಿಕೊಂಡಿತ್ತು. ಹೀಗಾಗಿ ರೋಜಮ್ಮಳ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವಾಗಿದೆ. ಆಸ್ಪತ್ರೆಗೆ ಬಂದಾಗ ದುಡ್ಡು ಕೊಡದೆಯೇ ಕೆಲಸವೇ ಮಾಡಲ್ಲ. ಮಾಡುವ ಕೆಲಸದಲ್ಲೂ ನಿರ್ಲಕ್ಷ ತೋರಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮೃತ ರೋಜಮ್ಮಗೆ 40ದಿನದ ಪುಟ್ಟ ಮಗು ಸೇರಿ ಮೂವರು ಮಕ್ಕಳಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಸೂಕ್ತ ಪರಿಹಾರ ನೀಡಬೇಕೆಂಬುದು ಸಂಬಂಧಿಕರು ಆಗ್ರಹಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರದಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವನ್ನಪ್ಪಿರುವ ಗಂಭೀರ ಆರೋಪ ಕೇಳಿ ಬಂದಿದೆ. ಮೃತರ ಕುಟುಂಬಸ್ಥರು ಮತ್ತು ಕನ್ನಡಪರ ಸಂಘಟನೆ ಕಾರ್ಯಕರ್ತರು ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮತ್ತು ಸರ್ಕಾರ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕಿದೆ.

Comments (0)

Your email address will not be published. Required fields are marked *

Back to top button