Top Newsರಾಜ್ಯಸುದ್ದಿ

ವಾಯುಭಾರ ಕುಸಿತ, ಬೆಳಗ್ಗಿನಿಂದಲೇ ಮೊಡ ಕವಿದ ವಾತಾವರಣ, ರಾಜಧಾನಿ ಸುತ್ತಮುತ್ತ ತುಂತುರು ಮಳೆ

ಬೆಂಗಳೂರು: ಸಮುದ್ರ ಮಟ್ಟ ಪ್ರದೇಶದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಬೆಂಗಳೂರು ನಗರ ಸೇರಿ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಚಳಿಯೂ ಇದೆ. ದಿನವಿಡೀ ಹಗುರದಿಂದ ಮಳೆಯಾಗುವ ಲಕ್ಷಣ ಕಂಡು ಬಂದಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಹಾಗೂ ಚಳಿಯಿಂದಾಗಿ ನಗರದ ಜನರು ರೈನ್‌ ಕೋಟ್‌, ಸ್ವೆಟರ್‌ ಸೇರಿ ಬೆಚ್ಚನೆಯ ಉಡುಪು ಧರಿಸಿ ಮನೆಯಿಂದ ಹೊರಬರುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಚಿಕ್ಕಪೇಟೆ, ಕೆ.ಆ‌ರ್. ಮಾರುಕಟ್ಟೆ, ವಿಜಯನಗರ, ಕಾಮಾಕ್ಷಿಪಾಳ್ಯ, ಮೆಜೆಸ್ಟಿಕ್, ಬಸವನಗುಡಿ, ಮೈಸೂರು ರಸ್ತೆ, ಮಲ್ಲೇಶ್ವರ, ಜೆ.ಸಿ.ರಸ್ತೆ, ವಿದ್ಯಾಪೀಠ, ಯಲಹಂಕ, ಆರ್.ಆರ್.ನಗರ, ಚಾಮರಾಜಪೇಟೆ ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ತುಸು ಮಳೆ ಸುರಿದಿದೆ.

ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

ಡಿ.13ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿ.14ರ ನಂತರ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಮತ್ತು ವಿಜ್ಞಾನಿ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಆರೋಗ್ಯ ಕಾಳಜಿ ಇರಲಿ

ಫೆಂಗಲ್‌ ಚಂಡಮಾರುತದ ಬಳಿಕ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಜಿಲ್ಲೆಗಳ ಹವಾಮಾನದಲ್ಲಿ ಬದಲಾವಣೆ ಕಾಣಿಸಿಕೊಳ್ಳುತ್ತಿದೆ. ಇನ್ನು ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ, ಚಳಿ, ಬಿಸಿಲು ಕೂಡಿದ ವಾತಾವರಣವಿದೆ. ಇದರಿಂದ ವೈರಲ್‌ ಜ್ವರ, ಶೀತ, ಕೆಮ್ಮು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಆರೋಗ್ಯದ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button