#Exclusive NewsTop Newsರಾಜ್ಯಸುದ್ದಿ

ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಕ್ರಮ : ಸಿದ್ದರಾಮಯ್ಯ

ಬೆಂಗಳೂರು : ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ದತೆಗಳ ಪರಿಶೀಲನೆ ನಡೆಸಿದರು.

ಬೆಳಗಾವಿಯಲ್ಲಿ ಎರಡು ದಿನಗಳ ಕಾರ್ಯಕ್ರಮಗಳ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, 27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ.

ಶತಮಾನೋತ್ಸವ ಸಮಾರಂಭಕ್ಕೆ ರಾಷ್ಟ್ರದೆಲ್ಲೆಡೆಯಿಂದ ಆಗಮಿಸಲಿರುವ ಸಂಸದರು, ಗಣ್ಯರಿಗೆ ವಸತಿ, ಊಟೋಪಚಾರ ಸೇರಿದಂತೆ ಸೂಕ್ತ ಆತಿಥ್ಯ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಸಮಿತಿಗಳಿಗೆ ಸೂಚಿಸಲಾಯಿತು.

ಡಿಸೆಂಬರ್ 27ರಂದು ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ನೆರವೇರಿಸುವ ಕುರಿತು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಯಿತು

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ಪ್ರಥಮ ಬಾರಿಗೆ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಈಗ ಅದಕ್ಕೂ ನೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಆ ಹಾಡನ್ನು ಪುನಃ ಶತಮಾನೋತ್ಸವ ಆಚರಣೆ ಯಲ್ಲಿ ಹಾಡಿಸುವ ಕುರಿತು ತೀರ್ಮಾನಿಸಲಾಯಿತು.

ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಚಿವರಾದ ಪರಮೇಶ್ವರ್, ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬೋಸರಾಜು, ಡಾ. ಎಂ ಸಿ ಸುಧಾಕರ್, ರಹೀಂಖಾನ್‌, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಮಧು ಬಂಗಾರಪ್ಪ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Comments (0)

Your email address will not be published. Required fields are marked *

Back to top button