#Exclusive NewsTop Newsಜಿಲ್ಲೆಸುದ್ದಿ
ಶಿವಮೊಗ್ಗದಲ್ಲಿ ಮತ್ತೆ ಮಂಗನ ಕಾಯಿಲೆ….!

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟ ಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯನ್ನು ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ. ಕಳೆದ ಬಾರಿ ಜನರಿಗೆ ಸಿಂಹಸ್ವಪ್ನದಂತೆ ಕಾಡಿ ಅನೇಕ ಸಾವು ನೋವುಗಳಿಗೆ ಕಾರಣವಾಗಿದ್ದ ಕೆಎಫ್ಡಿ ವೈರಸ್ ಈ ಬಾರಿ ಮಳೆ ಹೊರತಾಗಿಯೂ ತನ್ನ ಇರುವಿಕೆಯನ್ನು ಋಜುವಾತುಪಡಿಸಿದೆ.
ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಉಣುಗುಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ವೈರಸ್ ಇರುವುದು ದೃಢಪಟ್ಟಿದೆ. ಈ ಭಾಗದ ಜನರು ಹೆಚ್ಚು ಜಾಗ್ರತೆ ವಹಿಸಬೇಕಿದೆ. ಈಗ ಎಲ್ಲಿ ನೋಡಿದರೂ ಅಡಕೆ ಕೊಯ್ಲು, ತೋಟಕ್ಕೆ ಗೊಬ್ಬರ ಹಾಕುವುದು, ಶುಂಠಿ ಬೆಳೆಯುವವರು ಕಾಡಿನಲ್ಲಿ ತರಗು (ಒಣಗಿದ ಎಲೆ) ಸಂಗ್ರಹಿಸುವುದು ನಡೆಯುತ್ತಿದೆ. ಕಳೆದ ಬಾರಿ ಕೆಎಫ್ಡಿ ಪಾಸಿಟಿವ್ ಬಂದಿದ್ದ ಬಹಳಷ್ಟು ಮಂದಿ ತೋಟಗಳಿಗೆ ಕೆಲಸಕ್ಕೆ ಹೋದವರಾಗಿದ್ದು, ಈ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಬೇಕಿದೆ.
ಅಡಕೆ ತೋಟದ ಕೆಲಸಕ್ಕಾಗಿ ಶಿವಮೊಗ್ಗ ಅಷ್ಟೇ ಅಲ್ಲದೇ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಭಾಗದ ಕೂಲಿ ಕಾರ್ಮಿಕರು ಸಹ ಆಗಮಿಸುತ್ತಿದ್ದು ಅವರಿಗೆ ಇಲ್ಲಿನ ಉಣುಗು, ಕೆಎಫ್ಡಿ ವೈರಸ್ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆರೋಗ್ಯ ಇಲಾಖೆ ಈ ಎಲ್ಲ ಕೂಲಿ ಕಾರ್ಮಿಕರಿಗೆ ಡೆಫಾ ಆಯಿಲ್ ಕೊಡುವುದು, ಉಣುಗುಗಳಿಂದ ರಕ್ಷಣೆ ಪಡೆಯುವುದು ಹೇಗೆ ಎಂಬುದನ್ನು ತಿಳಿಸಬೇಕಿದೆ.




