ಮಂಗಳೂರು : ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರವಾದ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯಲ್ಲಿ ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪಶ್ಚಿಮ ಘಟ್ಟದಿಂದ ಹರಿದು ಧರ್ಮಸ್ಥಳ ಬಳಿ ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ಹೊಳೆಯಲ್ಲಿ ಮೂಟೆಗಟ್ಟಲೆ ಗೋವಿನ ರುಂಡ, ಮುಂಡ, ಚರ್ಮ ಎಸೆದಿರುವುದು ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ ದುಷ್ಕೃತ್ಯ ಎಸಗಲಾಗಿದೆ. ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಗೋ ಹತ್ಯೆಯ ನಂತರದ ತ್ಯಾಜ್ಯವನ್ನು ದುರುಳರು ಎಸೆದಿದ್ದಾರೆ.
ಚಾರ್ಮಾಡಿ ಗ್ರಾಮದ ಅನ್ನಾರ್ ಬಳಿ ನದಿಯಲ್ಲಿ ಗೋವಿನ ರುಂಡ ಮುಂಡಗಳು ಪತ್ತೆಯಾಗಿರುವುದು ಈ ಪ್ರದೇಶದ ಹಲವು ಮನೆಗಳಲ್ಲಿ ಮತ್ತು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋ ಹತ್ಯೆ ನಡೆಯುತ್ತಿರುವ ಬಗ್ಗೆ ಅನುಮಾನಗಳನ್ನು ಸೃಷ್ಟಿಸಿದೆ. ಹೀಗೆ ಗೋ ಹತ್ಯೆ ಮಾಡಿದ ಬಳಿಕ ಅವುಗಳ ಅವಶೇಷವನ್ನು ಮೂಟೆ ಕಟ್ಟಿ ನದಿಗೆ ಎಸೆಯಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಮತ್ತೊಂದೆಡೆ, ಉದ್ದೇಶಪೂರ್ವಕವಾಗಿ ಪವಿತ್ರ ನದಿ ನೇತ್ರಾವತಿಯನ್ನು ಅಪವಿತ್ರ ಗೊಳಿಸುವ ಹುನ್ನಾರ ಇದು ಎಂಬ ಆರೋಪ ಕೂಡ ಕೇಳಿಬಂದಿದೆ.