ಗಾನ ಕೋಗಿಲೆ; ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ವಿಧಿವಶ


ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದಿದ್ದಾರೆ.
ಗಾನ ಕೋಗಿಲೆ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದರು.
ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು.
ಸುಕ್ರಜ್ಜಿಯ ಅದ್ಭುತ ಹಾಡುಗಾರಿಕೆ ಕಲೆಗೆ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.




