ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಬೆಂಗಳೂರು-ಶಿವಮೊಗ್ಗ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇಬ್ಬರು ಸ್ವಾಮೀಜಿಗಳು, ಮೂವರು ಶಾಸಕರು ಸೇರಿದಂತೆ 11 ಮಂದಿಯ ವಿರುದ್ಧ ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರಿಗೆ ತೊಂದರೆ, ಸರ್ಕಾರಿ ವಾಹನಗಳಿಗೆ ಹಾನಿ, ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಆ ಮೂಲಕ ಪ್ರತಿಭಟನಾಕಾರರ ಮೇಲೆ ಸರ್ಕಾರ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಗೌಡ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ವಿರುದ್ಧ ಕೇಸ್ ದಾಖಲಿಸಲಾಗಿದೆ. ಹಾಗೆಯೇ, ಬಿಜೆಪಿ ಮುಖಂಡರಾದ ದಿಲೀಪ್ ಕುಮಾರ್, ಹೆಬ್ಬಾಕ ರವಿ ಹಾಗೂ ಇಬ್ಬರು ಸ್ವಾಮೀಜಿಗಳ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನೂರಾರು ಜನರ ವಿರುದ್ಧ ಒಟ್ಟು 11 ಎಫ್ಐಆರ್ ದಾಖಲಿಸಿದ್ದು, ಇದರಲ್ಲಿ 10 ಸ್ವಯಂಪ್ರೇರಿತ ಪ್ರಕರಣಗಳಾಗಿವೆ. ಒಂದು ಕೇಸ್ ಮಾತ್ರ ಕಂಟ್ರ್ಯಾಕ್ಟರ್ ನೀಡಿದ ದೂರಿನ ಮೇಲೆ ದಾಖಲಾಗಿದ್ದು, ಇನ್ನೂ ಮೂರರಿಂದ ನಾಲ್ಕು ಕೇಸ್ ದಾಖಲಾಗುವ ಸಾಧ್ಯತೆ ಇದೆ. ಏನೇ ಎಫ್ಐಆರ್ ದಾಖಲಿಸಿದರೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.