ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳಿನಿಂದ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಂದು ಸಂಜೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
ರಾಜ್ಯದ ಕೆಎಸ್ಆರ್ಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಕಳೆದ ವರ್ಷ ಡಿ.31 ರಂದು ಮುಷ್ಕರಕ್ಕೆ ಸಾರಿಗೆ ನೌಕರರು ಕರೆ ನೀಡಿದ್ದರು. ಆಗ ಸಂಧಾನ ಸಭೆ ನಡೆಸಿದ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು. ಆದ್ರೆ ಈವರೆಗೂ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ 1ಲಕ್ಷ 10 ಸಾವಿರ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.


