Top Newsರಾಜ್ಯಸುದ್ದಿ

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಫೋನ್‌ ವಶಕ್ಕೆ !

ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿ, ಶವ ಹೂತಿದ್ದ ಬಗ್ಗೆ ದೂರು ನೀಡಿದ್ದ ಮಾಸ್ಕ್​ಮ್ಯಾನ್ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರನ ಮನೆಗೆ ತೆರಳಿ ಶೋಧ ಕಾರ್ಯ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ತಿಮರೋಡಿ ನಿವಾಸದಲ್ಲಿ ಚಿನ್ನಯ್ಯ ಬಳಸುತ್ತಿದ್ದ ಫೋನನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ. ನನ್ನ ಮೊಬೈಲ್‌ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಚಿನ್ನಯ್ಯ ಹೇಳಿದ್ದ. ಈ ಕಾರಣಕ್ಕೆ ಕೊಠಡಿಯ ಮಹಜರು ನಡೆಸಿ ಮೊಬೈಲ್‌ ಮತ್ತು ಬಟ್ಟೆಗಳನ್ನು ವಶಕ್ಕೆ ಪಡೆದಿದೆ.

ಧರ್ಮಸ್ಥಳದಲ್ಲಿ ಶೋಧ ನಡೆಯುತ್ತಿದ್ದಾಗ ಬುರುಡೆ ಗ್ಯಾಂಗ್‌ನ ಎಲ್ಲಾ ಸದಸ್ಯರು ತಿಮರೋಡಿ ಮನೆಯಲ್ಲೇ ತಂಗಿದ್ದರು. ಎಲ್ಲಾ ಪ್ಲ್ಯಾನ್‌ಗಳು ಇಲ್ಲೇ ಸಿದ್ಧವಾಗುತ್ತಿತ್ತು. ಹೀಗಾಗಿ ತಿಮರೋಡಿ ಮನೆಗೆ ಯಾರೆಲ್ಲ ಬಂದಿದ್ದರು ಎಲ್ಲಾ ವಿವರಗಳನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿ ಹಾರ್ಡ್‌ ಡಿಸ್ಕ್‌ ಅನ್ನು ವಶಕ್ಕೆ ಪಡೆದಿದ್ದಾರೆ.

ಸಿಸಿಟಿವಿ ಡಿವಿಆರ್‌ಗಳನ್ನು ಪೊಲೀಸರು ಪಡೆದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತಿಮರೋಡಿ ನಿವಾಸಕ್ಕೆ ಆಗಮಿಸಿದ್ದ ವ್ಯಕ್ತಿಗಳ ವಿಚಾರಣೆಯನ್ನು ಪೊಲೀಸರು ನಡೆಸುವ ಸಾಧ್ಯತೆಯಿದೆ. ಇವರುಗಳನ್ನು ಪ್ರಕರಣದ ಸಾಕ್ಷಿಗಳಾಗುವ ಸಾಧ್ಯತೆಯಿದೆ.

ದಾಳಿ ನಡೆಯುವ ಬಗ್ಗೆ ಖಚಿತ ಮಾಹಿತಿ ಇದ್ದ ಕಾರಣ ಪೊಲೀಸ್‌ ವಾಹನಗಳ ಜೊತೆ ಇಂದು ಬೆಳಗ್ಗೆ ಮಾಧ್ಯಮಗಳ ವಾಹನಗಳು ತಿಮರೋಡಿಗೆ ತೆರಳಿತ್ತು. ಆದರೆ ಪೊಲೀಸರು ತಿಮರೋಡಿಗೆ ಹೋಗುವ ಮಾರ್ಗ ಮಧ್ಯೆಯೇ ಎಲ್ಲಾ ಮಾಧ್ಯಮಗಳ ವಾಹನಗಳನ್ನು ತಡೆದು ನಿಲ್ಲಿಸಿದ್ದರು.

Comments (0)

Your email address will not be published. Required fields are marked *

Back to top button