
ಬೆಂಗಳೂರು: ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ ಮೃತಪಟ್ಟಿದ್ದ 11 ಮಂದಿ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ ಆರ್ಸಿಬಿ ಕೇರ್ಸ್ ಅಡಿಯಲ್ಲಿ ಆರ್ಥಿಕ ಸಹಾಯವನ್ನು ಘೋಷಿಸಿದೆ.
ಈ ಸಂಬಂಧ ಟ್ವೀಟ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರ್ಸಿಬಿ ಜೂ.4 2025ರ ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ, ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು. ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಶಕ್ತಿ. ಅದು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು.

ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಗೌರವದ ಸಂಕೇತವಾಗಿ, ಆರ್ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ರೂ. ನೆರವು ನೀಡುತ್ತಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ, ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆಯಾಗಿದೆ.
ಇದು ಆರ್ಸಿಬಿ ಕೇರ್ಸ್ನ ಆರಂಭವೂ ಹೌದು. ಅವರ ನೆನಪನ್ನೂ ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ಬದ್ಧತೆಯಾಗಿದೆ ಎಂದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದೆ.




