ಮಂಡ್ಯ: ಮದ್ದೂರು ಪಟ್ಟಣದಲ್ಲಿ ಇಂದು ಸಾರ್ವಜನಿಕ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಭವ್ಯವಾದ ಶೋಭಾಯಾತ್ರೆ ನಡೆಯುತ್ತಿದೆ. ಮದ್ದೂರು ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂಪರ ಸಂಘಟನೆಗಳಿಂದ ಸಾಮೂಹಿಕ ಗಣೇಶಮೂರ್ತಿಗಳ ವಿಸರ್ಜನೆಯನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ.
30ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಒಳಗೊಂಡ ಈ ಮೆರವಣಿಗೆಯಲ್ಲಿ 30 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದಾರೆ. ಮದ್ದೂರಿನ ಎಂ.ಸಿ. ರಸ್ತೆಯ ಮಾರ್ಗದಲ್ಲಿ ವೇದಿಕೆಗಳನ್ನು ನಿರ್ಮಿಸಲಾಗಿದೆ. ಮೆರವಣಿಗೆಯ ಮಾರ್ಗದುದ್ದಕ್ಕೂ ಕಾರ್ಯಕರ್ತರಿಗೆ ಪಾನಕ ಮತ್ತು ಮಜ್ಜಿಗೆ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಶಾಮಿಯಾನಗಳನ್ನು ಹಾಕಿ, ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಸುತ್ತಮುತ್ತಲಿನ ಗ್ರಾಮಗಳಿಂದ ಗಣೇಶ ಮೂರ್ತಿಗಳು ಆಗಮಿಸುತ್ತಿವೆ. ಚಿಕ್ಕ ಮೂರ್ತಿಗಳಿಂದ ಹಿಡಿದು ದೊಡ್ಡ ದೊಡ್ಡ ಗಣೇಶ ವಿಗ್ರಹಗಳವರೆಗೆ ಎಲ್ಲವೂ ಟಿಬಿ ಸರ್ಕಲ್ನಲ್ಲಿ ಜಮಾಯಿಸುತ್ತಿವೆ.
ಎರಡು ದಿನಗಳ ಹಿಂದೆ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟದಂತಹ ಅಹಿತಕರ ಘಟನೆ ನಡೆದಿದ್ದರಿಂದ, ಈ ಬಾರಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ 2000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮದ್ದೂರು ಪಟ್ಟಣಾದ್ಯಂತ ಸರ್ಪಗಾವಲು ಮಾಡಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗಿದೆ.