ಬೆಂಗಳೂರು: ಬಿಜೆಪಿ ನಾಯಕ ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ.. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅವರ ಸಂಸ್ಕೃತಿ ಏನು ಅಂತ ಜನರಿಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಜಿಬಿಎ ಚುನಾವಣೆ ಬ್ಯಾಲೆಟ್ ಪೇಪರ್ನಲ್ಲಿ ನಡೆಸುವ ವಿಚಾರವಾಗಿ ಮಾತನಾಡಿ, ಜಿಬಿಎ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆಸೋದು ತಪ್ಪೇನು ಇಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಅವರೇ ಬ್ಯಾಲೆಟ್ನಲ್ಲಿ ಚುನಾವಣೆ ಮಾಡಬೇಕು ಎಂದು ಕಾನೂನು ಮಾಡಿದ್ದರು. ಎಲೆಕ್ಷನ್ ಕಮೀಷನ್ನಲ್ಲಿಯೂ ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆ ಮಾಡೋಕೆ ಅವಕಾಶ ಇದೆ. ಅದು ಅವರಿಗೆ ಬಿಟ್ಟ ವಿಚಾರ. ಜಿಬಿಎ ಆಕ್ಟ್ ಮಾಡೋವಾಗ ನಾನು ವಾಪಸ್ ತಂದಿದ್ದೇನೆ ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲೆಟ್ ಪೇಪರ್ನಲ್ಲಿ ಮಾಡೋದು ತಪ್ಪೇನು ಅಲ್ಲ. ಕಾನೂನು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಚುನಾವಣೆ ಆಯೋಗ ಯಾವುದಕ್ಕೆ ಸಿದ್ಧವಾಗಿದೆಯೋ ಅದರಂತೆ ನಾವು ನಡೆಸುತ್ತೇವೆ ಎಂದು ತಿಳಿಸಿದರು.
ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಅದರ ಬಗ್ಗೆ ಗೊತ್ತಿಲ್ಲ. ಈಗಷ್ಟೇ ಮಾಧ್ಯಮದವರು ಹೇಳಿದರು. ಆ ವಿಷಯ ಏನು ಅಂತ ಗೊತ್ತಿಲ್ಲ, ತಿಳಿದುಕೊಂಡು ಮಾತಾಡ್ತೀನಿ ಎಂದರು.
ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೆಂಟ್ ಮೇರಿಸ್ ಹೆಸರಿಡಬೇಕು ಎಂಬ ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ ಅವರು, ಮೆಟ್ರೋ ನಿಲ್ದಾಣಗಳಿಗೆ ಹೆಸರಿಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಈ ವಿಚಾರವಾಗಿ ನಾವು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.