
ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ನೈಸರ್ಗಿಕ ದುರಂತಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪತ್ತು ಪರಿಹಾರ ಮತ್ತು ಪುನರ್ವಸತಿಗೆ 5 ಕೋಟಿ ರೂಪಾಯಿ ಆರ್ಥಿಕ ನೆರವು ಪ್ರಕಟಿಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ, ಸಾವಿರಾರು ಮನೆಗಳು ಕೊಚ್ಚಿಹೋಗಿವೆ, ಮೂಲಸೌಕರ್ಯಗಳು ನಾಶವಾಗಿವೆ. ಇದಕ್ಕೆ ಕರ್ನಾಟಕದ ಜನರು ತೀವ್ರ ಸಂತಾಪ ಸೂಚಿಸುತ್ತಾರೆ.
ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಾಗ, ಇಂತಹ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಒಗ್ಗಟ್ಟಾಗಿ ಅದನ್ನು ಎದುರಿಸಬೇಕು. ಹೀಗಾಗಿ, ಕರ್ನಾಟಕ ಹಿಮಾಚಲ ಪ್ರದೇಶದ ಜನರ ಜೊತೆ ಹೆಗಲಿಗೆ ಹೆಗಲಾಗಿ ನಿಲ್ಲುತ್ತದೆ. ನಿಮ್ಮ ಕಷ್ಟಕಾಲದಲ್ಲಿ ನಾವು ನಿಮ್ಮೊಂದಿದ್ದೇವೆ’ ಎಂದು ಸಿಎಂ ಸಿದ್ದರಾಮಯ್ಯ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಪತ್ರ ಬರೆದಿದ್ದಾರೆ. ವಿಪತ್ತಿಗೀಡಾದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಸರ್ಕಾರದಿಂದ 5 ಕೋಟಿ ರೂ. ಹಣವನ್ನು ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.




