
ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಳವಳ್ಳಿಯಲ್ಲಿ ನಡೆಯುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.. ಇಂದಿನಿಂದ ಡಿ.22ರವರೆಗೆ ಒಟ್ಟು 7 ದಿನಗಳ ಕಾಲ ಸಮಾರಂಭ ನಡೆಯಲಿದೆ..
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಅವರು ಭಾಗಿಯಾಗಿದ್ದು, ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ..
ಜಯಂತಿ ಮಹೋತ್ಸವ ಹಿನ್ನೆಲೆ ಪ್ರವಾಸಿ ಮಂದಿರ, ತಾಲೂಕು ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿಯೂ ಆರೋಗ್ಯ ಸಿಬ್ಬಂದಿ ಲಭ್ಯವಾಗಿರಬೇಕು. ತುರ್ತು ಚಿಕಿತ್ಸೆಗೆ ಬೇಕಾದ ಆಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಾ. ಸಂಜಯ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ. ವೀರಭದ್ರಪ್ಪ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ರಾಷ್ಟ್ರಪತಿಗಳ ಆಗಮನದ ಹಿನ್ನೆಲೆ ಮಳವಳ್ಳಿಯಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಡಿ.14 ರಂದು ಭದ್ರತಾ ಪಡೆ ಅಧಿಕಾರಿಗಳು ಮಳವಳ್ಳಿಯ ಮಾರೆಹಳ್ಳಿ ಬಳಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಜಾಗದಲ್ಲಿ ಹೆಲಿಕಾಪ್ಟರ್ ಅಣಕು ಪ್ರದರ್ಶನ ನಡೆಸಿದ್ದರು.
ಸುಮಾರು 30 ಎಕರೆ ಪ್ರದೇಶದಲ್ಲಿ ಬೃಹತ್ ಜಯಂತಿ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಚಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.




