
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲೇ ವೈದ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಾ. ನಾಗೇಂದ್ರ ಶಿರೂರು ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ವೈದ್ಯರು ಎಂದು ತಿಳಿದು ಬಂದಿದೆ..
ಇಂದು ಮಧ್ಯಾಹ್ನ ವಿಧಾನಸೌಧದ ಆವರಣಕ್ಕೆ ಬಂದ ಡಾ. ನಾಗೇಂದ್ರಪ್ಪ, ಇದ್ದಕ್ಕಿದ್ದಂತೆ ವಿಷದ ಬಾಟಲಿ ತೆಗೆದು ಸೇವಿಸಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ತಕ್ಷಣ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಅವರ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಕಿತ್ತುಕೊಂಡಿದ್ದಾರೆ. ಕೂಡಲೇ ಅವರನ್ನು ಪೊಲೀಸ್ ವಾಹನದಲ್ಲಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿ ತುರ್ತು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಾಗೇಂದ್ರಪ್ಪ ಅವರು ಇತ್ತೀಚೆಗೆ ಪುನೀತ್ ಕೆರೆಹಳ್ಳಿ ಅವರೊಂದಿಗೆ ಸೇರಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಗೇಂದ್ರಪ್ಪ ಮತ್ತು ಪುನೀತ್ ಕೆರೆಹಳ್ಳಿ ಮೇಲೆ ಪ್ರಕರಣ ದಾಖಲಿಸಿದ್ದರು. ಪೊಲೀಸರು ಅನಗತ್ಯವಾಗಿ ತಮ್ಮನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂದು ನಾಗೇಂದ್ರಪ್ಪ ಮನನೊಂದಿದ್ದರು.
ಪೊಲೀಸರು ತಮ್ಮ ಮೇಲೆ ನಿರಂತರ ನಿಗಾ ಇಟ್ಟಿದ್ದರಿಂದ ಹಾಗೂ ದಾಖಲಾದ ಪ್ರಕರಣದಿಂದ ಬೇಸತ್ತು, ಸರ್ಕಾರದ ಗಮನ ಸೆಳೆಯಲು ವಿಧಾನಸೌಧದ ಮುಂದೆಯೇ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಘಟನೆಯ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವೈದ್ಯರು ವಿಷ ಸೇವಿಸುವ ಮುನ್ನ ಯಾವುದಾದರೂ ಡೆತ್ ನೋಟ್ ಬರೆದಿದ್ದಾರೆಯೇ ಅಥವಾ ಈ ಕೃತ್ಯದ ಹಿಂದೆ ಬೇರೆ ಯಾರಾದರೂ ಪ್ರೇರೇಪಿಸಿದ್ದಾರೆಯೇ ಎಂಬ ಆಯಾಮದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.




