ದೇಶ/ವಿದೇಶರಾಜಕೀಯರಾಜ್ಯಸುದ್ದಿ

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಅಮಿತ್ ಶಾಗೆ ಯತ್ನಾಳ್​​​​​​​ ಪತ್ರ

ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್‌ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿರುವ ಯತ್ನಾಳ್, ರಾಜ್ಯದ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯಿಂದಾಗಿ ಕರ್ನಾಟಕವು ಬಾಂಗ್ಲಾ ನಿವಾಸಿಗಳ ಅಕ್ರಮ ತಾಣವಾಗಿ ಮಾರ್ಪಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶೀಯರು ನಕಲಿ ದಾಖಲೆಗಳ ಮೂಲಕ ಆಧಾರ್ ಕಾರ್ಡ್ ಸೇರಿದಂತೆ ವಿವಿಧ ಗುರುತಿನ ಚೀಟಿಗಳನ್ನು ಪಡೆದಿದ್ದಾರೆ. ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾದ ಸಂಪನ್ಮೂಲಗಳನ್ನು ಇವರು ಕಬಳಿಸುತ್ತಿದ್ದಾರೆ ಎಂದು ಯತ್ನಾಳ್ ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿ ದುಡಿದ ಹಣವನ್ನು ಬಾಂಗ್ಲಾದೇಶಕ್ಕೆ ರವಾನಿಸುವ ಮೂಲಕ ಭಾರತವನ್ನು ಆರ್ಥಿಕವಾಗಿ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಅಭದ್ರಗೊಳಿಸಲು ಉಗ್ರ ಸಂಘಟನೆಗಳಿಗೆ ಇವರು ನೆರವು ನೀಡುತ್ತಿದ್ದಾರೆ ಎಂಬ ಅನುಮಾನವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಕಾಫಿ ತೋಟ, ತ್ಯಾಜ್ಯ ಘಟಕ ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಅಕ್ರಮವಾಗಿ ವಾಸಿಸುತ್ತಿರುವವರನ್ನು ಪತ್ತೆ ಹಚ್ಚಿದ ಮಾಧ್ಯಮ ಪ್ರತಿನಿಧಿಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸುತ್ತಿರುವುದು ದುರದೃಷ್ಟಕರ ಎಂದು ಕಿಡಿಕಾರಿದ್ದಾರೆ.

“ದೇಶದ ಐಕ್ಯತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರನ್ನು ಗುರುತಿಸಿ ಅವರ ದಾಖಲೆಗಳನ್ನು ರದ್ದುಪಡಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು,” ಎಂದು ಅವರು ಕೇಂದ್ರ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ. ಬಾಂಗ್ಲಾ ವಲಸಿಗರನ್ನು ಅವರ ದೇಶಕ್ಕೆ ವಾಪಸ್ ಕಳುಹಿಸುವ ಪ್ರಕ್ರಿಯೆ ಕೂಡಲೇ ಆರಂಭವಾಗಬೇಕು ಎಂಬುದು ಯತ್ನಾಳ್ ಅವರ ಬೇಡಿಕೆಯಾಗಿದೆ.

Comments (0)

Your email address will not be published. Required fields are marked *

Back to top button