
ಮುಂಬೈ: ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
“ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಹಲವರು ಸಾವನ್ನಪ್ಪಿದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅಜಿತ್ ಪವಾರ್ ಅವರ ಅಕಾಲಿಕ ನಿಧನವು ದೇಶಕ್ಕೆ ಮತ್ತು ಮಹಾರಾಷ್ಟ್ರಕ್ಕೆ ಭರಿಸಲಾಗದ ನಷ್ಟವಾಗಿದೆ,” ಎಂದು ರಾಷ್ಟ್ರಪತಿಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅಭಿವೃದ್ಧಿಗೆ, ಅದರಲ್ಲೂ ವಿಶೇಷವಾಗಿ ಸಹಕಾರಿ ವಲಯದಲ್ಲಿ ನೀಡಿದ ಮಹತ್ವದ ಕೊಡುಗೆಯನ್ನು ರಾಷ್ಟ್ರಪತಿಗಳು ಸ್ಮರಿಸಿದ್ದಾರೆ. “ಅವರ ಅಭಿವೃದ್ಧಿಪರ ಚಿಂತನೆ ಮತ್ತು ರಾಜ್ಯದ ಮೇಲಿನ ಅವರ ಕಾಳಜಿಗಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು. ಅವರ ಕುಟುಂಬ, ಅಭಿಮಾನಿಗಳು ಮತ್ತು ಅಪಘಾತದಲ್ಲಿ ಮೃತಪಟ್ಟ ಎಲ್ಲರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ,” ಎಂದು ಸಂತಾಪ ಸೂಚಿಸಿದ್ದರೆ.




