Top Newsಸಿನಿಮಾಸುದ್ದಿ

ನಟ ದರ್ಶನ್ ಮನೆಯೂಟದ ಆಸೆಗೆ ಬ್ರೇಕ್ ಬೀಳುತ್ತಾ? ವಾದಕ್ಕೆ ಸಿಗದ ಪೂರಕ ಬೆಂಬಲ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ಮನೆ ಊಟ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ತೀವ್ರಗೊಂಡಿದೆ. ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಕಾರಾಗೃಹ ಇಲಾಖೆ ಸಲ್ಲಿಸಿದ್ದ ಅರ್ಜಿಯ ಮೇಲೆ ಹೈಕೋರ್ಟ್ ಮಹತ್ವದ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ವಾರಕ್ಕೊಮ್ಮೆ ಮನೆ ಊಟ ಸವಲತ್ತು ನೀಡಲು ವಿಚಾರಣಾ ನ್ಯಾಯಾಲಯ ಈ ಹಿಂದೆ ಅನುಮತಿ ನೀಡಿತ್ತು. ಆದರೆ, ಜೈಲು ನಿಯಮಾವಳಿಗಳ ಪ್ರಕಾರ ಇಂತಹ ವಿಶೇಷ ಸವಲತ್ತು ನೀಡುವುದು ಕಾನೂನುಬಾಹಿರ ಮತ್ತು ಇದು ಇತರ ಕೈದಿಗಳ ನಡುವೆ ತಾರತಮ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ವಾದಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠವು, ಕೈದಿಗಳಿಗೆ ಇಂತಹ ವಿಶೇಷ ಸವಲತ್ತುಗಳನ್ನು ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಉಲ್ಲೇಖಿಸಿ ಕೆಲವು ಕಟುವಾದ ಪ್ರಶ್ನೆಗಳನ್ನು ಕೇಳಿದೆ.

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ಬೇರೆ ಕೆಲವು ಪ್ರಕರಣಗಳಲ್ಲಿ ಕೈದಿಗಳಿಗೆ ಮನೆ ಊಟ ನೀಡಲಾಗುತ್ತಿದೆ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು, ಈ ಪ್ರಕರಣದಲ್ಲಿ ವೈದ್ಯಕೀಯ ಮಂಡಳಿಯು ಅನಿವಾರ್ಯವಾಗಿ ಮನೆ ಊಟ ನೀಡಲೇಬೇಕು ಎಂದು ಶಿಫಾರಸು ಮಾಡಿದೆಯೇ ಎಂದು ಪ್ರಶ್ನಿಸಿದೆ. ಕೇವಲ ವೈಯಕ್ತಿಕ ಇಚ್ಛೆಯ ಮೇಲೆ ವಿಶೇಷ ಊಟದ ಸವಲತ್ತು ನೀಡಲು ಸಾಧ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಇಲ್ಲಿ ಗಂಭೀರವಾಗಿ ಪರಿಗಣಿಸಲಾಗಿದೆ.

ಅಂತಿಮವಾಗಿ ಹೈಕೋರ್ಟ್, ವಿಚಾರಣಾಧೀನ ಕೈದಿಗಳಿಗೆ ಮನೆ ಊಟ ನೀಡುವ ವಿಚಾರದಲ್ಲಿ ಸ್ಪಷ್ಟವಾದ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಬೇಡಿಕೆಗಳು ಬಂದಾಗ ಯಾವ ಮಾನದಂಡಗಳನ್ನು ಅನುಸರಿಸಬೇಕು ಎಂಬ ಬಗ್ಗೆ ನ್ಯಾಯಾಲಯ ನಿರ್ದೇಶನ ನೀಡುವ ಸಾಧ್ಯತೆಯಿದೆ. ಸದ್ಯಕ್ಕೆ ಅರ್ಜಿಯ ಸಂಪೂರ್ಣ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಾಲಯವು ತನ್ನ ಅಂತಿಮ ಆದೇಶವನ್ನು ಕಾಯ್ದಿರಿಸಿದೆ. ಇದರಿಂದ ಆರೋಪಿಗಳಿಗೆ ಮನೆಯ ಊಟ ಸಿಗುತ್ತದೆಯೇ ಅಥವಾ ಜೈಲಿನ ಊಟವೇ ಗತಿ ಎಂಬುದು ಇನ್ನು ಕೆಲವೇ ದಿನಗಳಲ್ಲಿ ಸ್ಪಷ್ಟವಾಗಲಿದೆ.

Comments (0)

Your email address will not be published. Required fields are marked *

Back to top button