ಯಾದಗಿರಿ: ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್ ವಿಚಾರವಾಗಿ ಆರಂಭವಾದ ಸಣ್ಣ ಕಿಡಿ, ತಾಯಿ ಮತ್ತು ಮಗನ ಮೇಲೆ ಹಲ್ಲೆ ಹಾಗೂ ಗ್ರಾಮಸ್ಥರ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ.
ಗ್ರಾಮದಲ್ಲಿ ಶಿವಮಾಲಾಧಾರಿಗಳ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಕೇಸರಿ ಧ್ವಜಗಳನ್ನು ಅಳವಡಿಸಲಾಗಿತ್ತು. ಈ ಧ್ವಜಗಳ ಫೋಟೋವನ್ನು ರಮೇಶ್ ಎಂಬ ಯುವಕ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದನು. ಆದರೆ, ಆ ಫೋಟೋ ಮಸೀದಿಯ ಮೇಲೆ ಧ್ವಜ ಹಾರಿಸಿದಂತೆ ತಪ್ಪಾಗಿ ಅರ್ಥೈಸಲ್ಪಟ್ಟ ಹಿನ್ನೆಲೆಯಲ್ಲಿ, ಆಕ್ರೋಶಗೊಂಡ ಏಳು ಮಂದಿ ಯುವಕರ ಗುಂಪು ರಮೇಶ್ ಮನೆಗೆ ನುಗ್ಗಿ ಮನಬಂದಂತೆ ಹಲ್ಲೆ ನಡೆಸಿದೆ. ಮಗನನ್ನು ರಕ್ಷಿಸಲು ಬಂದ ತಾಯಿ ನಾಗಮ್ಮಳ ಮೇಲೂ ಈ ಗುಂಪು ಹಲ್ಲೆ ಮಾಡಿರುವುದು ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಿಸಿದೆ.
ತಾಯಿ ಮತ್ತು ಮಗನ ಮೇಲೆ ಹಲ್ಲೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಎಚ್ಚೆತ್ತ ಶಿವ ಮಾಲಾಧಾರಿಗಳು ಮತ್ತು ನೂರಾರು ಗ್ರಾಮಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕೈಯಲ್ಲಿ ಶಿವ-ಪಾರ್ವತಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಹಿಡಿದು ನಡುರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರು, ಹಲ್ಲೆ ಮಾಡಿದವರು ಕೂಡಲೇ ಕ್ಷಮೆ ಯಾಚಿಸಬೇಕು ಮತ್ತು ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದರು. ಘಟನೆಗೆ ಸಂಬಂಧಿಸಿದಂತೆ ಮುಲಾಂಗ, ರಿಯಾಜ್, ಖಾಜಾ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ನಾಗಮ್ಮ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡಿದ್ದಾರೆ.


