ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆ ಮತ್ತೆ ಕಾವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲಗಳು ಶಾಸಕರನ್ನು ಇಕ್ಕಟ್ಟಿಗೆ ಸಿಲುಕಿಸಿವೆ.

ಈ ವಿಷಯದಲ್ಲಿ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರು ವಹಿಸಿರುವ ಮೌನವು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದ್ದು, “ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ” ಎಂದು ಸ್ವಪಕ್ಷದ ಶಾಸಕರೇ ಗೊಣಗುತ್ತಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದ್ದರೂ ನಾಯಕತ್ವದ ಸ್ಪಷ್ಟತೆ ಇಲ್ಲದಿರುವುದು ಪಕ್ಷದ ಸಂಘಟನೆಯ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ವ್ಯಕ್ತವಾಗಿದೆ. ಅನುದಾನಕ್ಕಾಗಿ ಸಿಎಂ ಬಳಿ ಹೋದರೆ ಡಿಸಿಎಂಗೆ ಬೇಸರ, ಡಿಸಿಎಂ ಬಳಿ ಹೋದರೆ ಸಿಎಂಗೆ ಕೋಪ ಎನ್ನುವಂತಾಗಿರುವ ಶಾಸಕರು, ಈ ಗಾಢ ಮೌನವನ್ನು ಮುರಿದು ಹೈಕಮಾಂಡ್ ಶೀಘ್ರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿ ಎಂದು ಆಗ್ರಹಿಸುತ್ತಿದ್ದಾರೆ. ಅಧಿವೇಶನದ ನಡುವೆಯೇ ಶಾಸಕರ ಈ ಆಂತರಿಕ ಅಸಮಾಧಾನ ಹೊರಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೆ ಬದಲಾವಣೆಯ ಗಾಳಿ ಬೀಸಲಿದೆಯೇ ಎಂಬ ಕುತೂಹಲ ಮೂಡಿಸಿದೆ.


