
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿರುವ ಅವರು, ಈ ನಿರ್ಧಾರ ಸಂಪೂರ್ಣವಾಗಿ ರಾಜ್ಯ ಸರ್ಕಾರದ್ದೇ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮೆಟ್ರೋ ದರದಲ್ಲಿ ಬದಲಾವಣೆ ಮಾಡುವ ಪೂರ್ಣ ಸ್ವಾತಂತ್ರ್ಯ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರಕ್ಕೆ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಈಗಾಗಲೇ ಈ ಕುರಿತು ಬಿಜೆಪಿ ಸಂಸದರು ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರವು ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಕೂಡಲೇ ಜನಸಾಮಾನ್ಯರಿಗೆ ಹೊರೆಯಾಗಿರುವ ಹೆಚ್ಚುವರಿ ದರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.




