ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದು, ಬೆಂಗಳೂರು, ಮೈಸೂರು ಮತ್ತು ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪ್ರಮುಖವಾಗಿ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಪುರುಷೋತ್ತಮ ದಾಸ್ ಅವರಿಗೆ ಸಂಬಂಧಿಸಿದ 11 ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ 5 ಹಾಗೂ ಬೆಂಗಳೂರಿನ 6 ಕೇಂದ್ರಗಳಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.
ದಾವಣಗೆರೆ ಮತ್ತು ಶಿವಮೊಗ್ಗದಲ್ಲೂ ಲೋಕಾಯುಕ್ತ ಬಿಸಿ ತಟ್ಟಿದ್ದು, ಬೆಸ್ಕಾಂ ಸಿವಿಲ್ ವಿಭಾಗದ ಇಂಜಿನಿಯರ್ ಆರ್.ಹೆಚ್. ಅರ್ಜುನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದ ತಂಡ ಈ ಕಾರ್ಯಾಚರಣೆ ಕೈಗೊಂಡಿದೆ.
ದಾವಣಗೆರೆಯ ನಿಟ್ಟುವಳ್ಳಿಯಲ್ಲಿರುವ ಅವರ ಕೊಠಡಿ ಮತ್ತು ಕಚೇರಿ ಮಾತ್ರವಲ್ಲದೆ, ಶಿವಮೊಗ್ಗದ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ನಿವಾಸದಲ್ಲಿ ಈಗಾಗಲೇ ಚಿನ್ನಾಭರಣ, ಬೆಳ್ಳಿ ಮತ್ತು ಆಸ್ತಿ ಪತ್ರಗಳು ಪತ್ತೆಯಾಗಿದ್ದು, ಅಧಿಕಾರಿಗಳು ಹೆಚ್ಚಿನ ತಪಾಸಣೆ ನಡೆಸುತ್ತಿದ್ದಾರೆ.


