ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಮತ್ತು ಸೋಷಿಯಲ್ ಮೀಡಿಯಾ ಗೀಳಿಗೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಚಿಂತನೆ ನಡೆಸಿದ್ದಾರೆ. ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪವಾಗಿದ್ದು, ಸಿಎಂ ಅವರ ಈ ಪ್ರಸ್ತಾವನೆಗೆ ಕುಲಪತಿಗಳು ಕೂಡ ಒಪ್ಪಿಗೆ ಸೂಚಿಸಿದ್ದಾರೆ.
ಹಿಂದೆಲ್ಲಾ ಮಕ್ಕಳು ಪಾಠ, ಆಟ ಮತ್ತು ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಗೇಮಿಂಗ್ ಹಾಗೂ ಸೋಷಿಯಲ್ ಮೀಡಿಯಾ ಗೀಳು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆಸ್ಟ್ರೇಲಿಯಾದಂತಹ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಈಗಾಗಲೇ ಈ ರೀತಿಯ ನಿಷೇಧ ಜಾರಿಯಲ್ಲಿದ್ದು, ಅದೇ ಮಾದರಿಯನ್ನು ರಾಜ್ಯದಲ್ಲೂ ತರುವ ಉದ್ದೇಶವನ್ನು ಸಿಎಂ ಸಭೆಯಲ್ಲಿ ವ್ಯಕ್ತಪಡಿಸಿದರು.
ಸಭೆಯಲ್ಲಿ ಡ್ರಗ್ಸ್ ಎಂಬ ಮಾರಕ ಪಿಡುಗಿನ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಕಡ್ಡಾಯವಾಗಿ ಡ್ರಗ್ಸ್ ಮುಕ್ತವಾಗಬೇಕು, ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ನೋಡಿಕೊಳ್ಳಲು ಡ್ರಗ್ಸ್ ಮಾಫಿಯಾಗಳಿಗೆ ಕಡಿವಾಣ ಹಾಕಬೇಕು ಮತ್ತು ಈ ನಿಟ್ಟಿನಲ್ಲಿ ಕುಲಪತಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.


