ಗದಗ: ಲೋಕಾಯುಕ್ತ ಬಲೆಯಲ್ಲಿ ಸಿಲುಕಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ.
ಗುತ್ತಿಗೆದಾರನೊಬ್ಬನಿಂದ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಶಾಸಕರು ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಯಲಹಂಕದ ಜುಡಿಷಿಯಲ್ ಲೇಔಟ್ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರ ಸೂಚನೆಯಂತೆ ಚಂದ್ರು ಲಮಾಣಿ ಅವರನ್ನು ಈಗ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಈ ಪ್ರಕರಣದಲ್ಲಿ ಕೇವಲ ಶಾಸಕರು ಮಾತ್ರವಲ್ಲದೆ, ಅವರ ಸರ್ಕಾರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ಹಾಗೂ ಸಂಬಂಧಿ ಗುರು ಲಮಾಣಿ ಅವರನ್ನೂ ಸಹ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಶಾಸಕರ ಜೊತೆಗೆ ಈ ಇಬ್ಬರು ಆರೋಪಿಗಳಿಗೂ ಮಾರ್ಚ್ 2ರವರೆಗೆ ಜೈಲು ವಾಸ ಅನಿವಾರ್ಯವಾಗಿದೆ. ಲಂಚದ ವ್ಯವಹಾರದಲ್ಲಿ ಈ ಇಬ್ಬರ ಪಾತ್ರವೂ ಇರುವುದು ಲೋಕಾಯುಕ್ತ ತನಿಖೆಯಿಂದ ದೃಢಪಟ್ಟ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಬಂಧಿತ ಶಾಸಕ ಡಾ. ಚಂದ್ರು ಲಮಾಣಿ, ಪಿಎ ಮಂಜುನಾಥ್ ಮತ್ತು ಖಾಸಗಿ ಪಿಎ ಗುರು ಅವರನ್ನು ಲೋಕಾಯುಕ್ತ ಪೊಲೀಸರು ಮೊದಲು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಆರೋಗ್ಯ ತಪಾಸಣೆಯ ಪ್ರಕ್ರಿಯೆಗಳು ಮುಗಿದ ನಂತರ ಎಲ್ಲರನ್ನೂ ಬೆಂಗಳೂರಿಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.


