ಗೌರಿಬಿದನೂರು: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು ಶೋಕ ವ್ಯಕ್ತವಾಗಿದೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯನ್ನು ಖಂಡಿಸಿ ಸಾವಿರಾರು ಜನರು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಖಮೇನಿ ಅವರು ಹಿಂದೆ ಅಲಿಪುರಕ್ಕೆ ಭೇಟಿ ನೀಡಿದ್ದನ್ನು ನೆನೆದ ಗ್ರಾಮಸ್ಥರು, ಅವರ ಸಾವಿನಿಂದ ಕಂಗೆಟ್ಟಿದ್ದಾರೆ. ಗೌರವಾರ್ಥವಾಗಿ ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದ್ದು, ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಕಪ್ಪು ಪಟ್ಟಿ ಧರಿಸಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪ್ಯಾಲೆಸ್ಟೈನ್ ಪರ ಧ್ವನಿಯಾಗಿದ್ದ ನಾಯಕನ ಅಂತ್ಯಕ್ಕೆ ಕಂಬನಿ ಮಿಡಿದಿದ್ದಾರೆ.


