
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ VBG-RAM-G (ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ – ಗ್ರಾಮೀಣ್) ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ನಲ್ಲಿ ಕಟುವಾಗಿ ಟೀಕಿಸಿದ್ದಾರೆ. ಈ ಯೋಜನೆಯು ಯುಪಿಎ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಇದು ಮಹಾತ್ಮ ಗಾಂಧೀಜಿಯವರ ‘ಗ್ರಾಮ ಸ್ವರಾಜ್’ ಪರಿಕಲ್ಪನೆಗೆ ವಿರುದ್ಧವಾಗಿದೆ ಎಂದು ಬಜೆಟ್ ಭಾಷಣದಲ್ಲಿ ಉಲ್ಲೇಖಿಸಲಾಗಿದೆ.
ಸರ್ಕಾರದ ಪ್ರಕಾರ, ಈ ಹೊಸ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಹಲವು ಅನಾಹುತಗಳು ಸಂಭವಿಸಲಿವೆ. ಉದ್ಯೋಗ ನೀಡುವ ಅಧಿಕಾರವು ಗ್ರಾಮ ಪಂಚಾಯಿತಿಗಳಿಂದ ಕೈತಪ್ಪಿ ಕೇಂದ್ರದ ಪಾಲಾಗಲಿದೆ. ಅಲ್ಲದೆ, ಪರೋಕ್ಷವಾಗಿ ಗುತ್ತಿಗೆದಾರರಿಗೆ ಮಣೆ ಹಾಕುವ ವ್ಯವಸ್ಥೆ ಜಾರಿಗೆ ಬರುವುದರಿಂದ ಬಡ ಕಾರ್ಮಿಕರಿಗೆ ಕೆಲಸದ ಅವಕಾಶಗಳು ಕಡಿಮೆಯಾಗಲಿವೆ. ಯೋಜನೆಯ ಜಾರಿ ಮತ್ತು ಅನುಷ್ಠಾನದ ಅಧಿಕಾರವೆಲ್ಲವೂ ದೆಹಲಿಯಲ್ಲಿ ಕೇಂದ್ರೀಕೃತವಾಗುವುದರಿಂದ ಗ್ರಾಮೀಣಾಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂದು ಸಿಎಂ ಎಚ್ಚರಿಸಿದ್ದಾರೆ.




