
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವಿಚಾರವು ರಾಜ್ಯಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸಚಿವ ಜೆ.ಪಿ. ನಡ್ಡಾ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಭಾರತದ ವಿದೇಶಾಂಗ ನೀತಿಯ ಬಗ್ಗೆ ವಿಪಕ್ಷಗಳು ಸಾರ್ವಜನಿಕರಲ್ಲಿ ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿವೆ , ಈ ಸೂಕ್ಷ್ಮ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿರುವ ಪ್ರತಿಯೊಬ್ಬ ಭಾರತೀಯನ ರಕ್ಷಣೆಗೂ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ವಿರೋಧ ಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಜೆ.ಪಿ. ನಡ್ಡಾ, “ವಿಪಕ್ಷಗಳಿಗೆ ದೇಶದ ಹಿತಾಸಕ್ತಿ ಅಥವಾ ಈ ಗಂಭೀರ ವಿಷಯದ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆಸುವಲ್ಲಿ ಆಸಕ್ತಿಯೇ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ. ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕಾದ ಸ್ಥಾನದಲ್ಲಿರುವ ವಿಪಕ್ಷಗಳು, ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿವೆ. ಇದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಮಟ್ಟದ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶವು ಒಗ್ಗಟ್ಟಿನಿಂದ ಇರಬೇಕಾದ್ದು ಅವಶ್ಯಕ. ಆದರೆ ವಿರೋಧ ಪಕ್ಷಗಳು ಸರ್ಕಾರದ ವಿದೇಶಾಂಗ ನೀತಿಯನ್ನು ತಪ್ಪಾಗಿ ಬಿಂಬಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿವೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ಸ್ಥಾಪನೆಗೆ ಮತ್ತು ಭಾರತೀಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ನಡ್ಡಾ ಸ್ಪಷ್ಟಪಡಿಸಿದ್ದಾರೆ.




