Top Newsರಾಜಕೀಯಸುದ್ದಿ

ಒಡಿಶಾ ಶಾಸಕರ ಖರೀದಿಗೆ ಯತ್ನಿಸಿದ ಕಿಡಿಗೇಡಿಗಳು ಅರೆಸ್ಟ್!

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಬಿಡದಿ ಬಳಿಯ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಯತ್ನಿಸಿದ “ಕುದುರೆ ವ್ಯಾಪಾರ”ದ ಗಂಭೀರ ಆರೋಪ ಕೇಳಿಬಂದಿದೆ. ಅಡ್ಡಮತದಾನದ ಭೀತಿಯಿಂದಾಗಿ ಒಡಿಶಾ ಕಾಂಗ್ರೆಸ್ ಶಾಸಕರನ್ನು ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ಇರಿಸಲಾಗಿದ್ದು, ಬೆಳಿಗ್ಗೆ ನಾಲ್ವರು ವ್ಯಕ್ತಿಗಳು ಶಾಸಕರನ್ನು ಭೇಟಿಯಾಗಿ ಆಮಿಷವೊಡ್ಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಚಟುವಟಿಕೆಯನ್ನು ಗಮನಿಸಿದ ಕಾಂಗ್ರೆಸ್ ಮುಖಂಡರು ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೆಸಾರ್ಟ್‌ನಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಬಳಿ ಕೆಲವು ಖಾಲಿ ಚೆಕ್‌ಗಳು ಪತ್ತೆಯಾಗಿದ್ದು, ಇದು ಆಮಿಷದ ಆರೋಪಕ್ಕೆ ಪುಷ್ಟಿ ನೀಡಿದೆ. ಪತ್ತೆಯಾದ ಚೆಕ್‌ಗಳಲ್ಲಿ ಬಿರೇಂದ್ರ ಪ್ರಸಾದ್ ಎಂಬುವವರ ಹೆಸರಿರುವುದು ಕಂಡುಬಂದಿದೆ. ಆರೋಪಿಗಳ ಪಟ್ಟಿಯಲ್ಲಿ ಬಿರೇಂದ್ರ ಪ್ರಸಾದ್, ಅಜಿತ್ ಕುಮಾರ್ ಸಾಹು ಮತ್ತು ಸುಮಾಚಲ್ ಮಹಾಕೂದ ಎಂಬ ಹೆಸರುಗಳು ಕೇಳಿಬರುತ್ತಿದ್ದು, ಇವರಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಬಿಡದಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ವಶಕ್ಕೆ ಪಡೆದ ಇಬ್ಬರು ವ್ಯಕ್ತಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಒಡಿಶಾ ರಾಜ್ಯಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಕರ್ನಾಟಕದ ನೆಲದಲ್ಲಿ ಈ ರೀತಿಯ ರಾಜಕೀಯ ಹೈಡ್ರಾಮಾ ಮತ್ತು ಕುದುರೆ ವ್ಯಾಪಾರದ ಆರೋಪ ಕೇಳಿಬಂದಿರುವುದು ರಾಷ್ಟ್ರ ಮಟ್ಟದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಮತ್ತು ಸಂಚಲನಕ್ಕೆ ಕಾರಣವಾಗಿದೆ.

Comments (0)

Your email address will not be published. Required fields are marked *

Back to top button