
ಮೈಸೂರು: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ವಿಶೇಷವಾಗಿ ಚಾಮುಂಡಿ ಬೆಟ್ಟದ ಪ್ರಾಧಿಕಾರದ ಅಧಿಕಾರಿಗಳು ಸ್ಥಳೀಯ ನಿವಾಸಿಗಳ ಭಾವನೆಗಳಿಗೆ ಸ್ಪಂದಿಸುತ್ತಿಲ್ಲ ಮತ್ತು ಜನಪ್ರತಿನಿಧಿಗಳ ಮಾತಿಗೆ ಕಿಂಚಿತ್ತೂ ಬೆಲೆ ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಪ್ರಾಧಿಕಾರದ ರಚನೆಯ ವಿಷಯವು ನ್ಯಾಯಾಲಯದಲ್ಲಿದ್ದರೂ ಸಹ, ಅಲ್ಲಿನ ಅಧಿಕಾರಿಗಳು ಯಾರ ಮಾತಿಗೂ ಮನ್ನಣೆ ನೀಡದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂಬ ವ್ಯಾಪಕ ದೂರುಗಳು ಕೇಳಿಬರುತ್ತಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಜನಪ್ರತಿನಿಧಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸದಿರುವುದು ಆಡಳಿತ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತದೆ ಎಂದು ಯದುವೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಈ ರೀತಿಯ ವರ್ತನೆಯಿಂದಾಗಿ ಸಾರ್ವಜನಿಕ ಕೆಲಸಗಳು ಮತ್ತು ಜನರ ಸಮಸ್ಯೆಗಳ ಪರಿಹಾರಕ್ಕೆ ಹಿನ್ನಡೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ನಗರದ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದ ಅವರು, ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಕ್ರಾಸಿಂಗ್ನಲ್ಲಿ ಅಂಡರ್ಪಾಸ್ ನಿರ್ಮಾಣಕ್ಕೆ ಎದುರಾಗಿದ್ದ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿದ್ದು, ಇಲಾಖೆಗಳಿಂದ ಅನುಮತಿ ಸಿಕ್ಕಿರುವುದರಿಂದ ಮುಂದಿನ 15 ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಭರವಸೆ ನೀಡಿದ್ದಾರೆ.




